ತುಮಕೂರು: ‘ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಲಶಕ್ತಿ ಅಭಿಯಾನದ ನೋಡಲ್ ಅಧಿಕಾರಿ ಆರ್.ಕೆ.ಚಂದೋಳಿಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
‘ಜಿಲ್ಲೆಯಲ್ಲಿ ಮಳೆಯು ಬಾರದೆ ನೀರಿನ ಕೊರತೆ ಇರುವುದರಿಂದ ಜಲಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು’ ಎಂದು ಸೂಚಿಸಿದರು.
ಮಳೆಯ ಕೊರತೆಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೋರ್ವೆಲ್ಗಳಲ್ಲಿಯೂ ನೀರು ಬತ್ತಿ ಹೋಗಿದ್ದು, ನೀರಿನ ಕೊರತೆಯುಂಟಾಗಿದೆ. ನೀರಿನ ಬವಣೆಯನ್ನು ನೀಗಿಸಲು ಕೆರೆ-ಕುಂಟೆಗಳಲ್ಲಿ ನೀರು ಶೇಖರಣೆ ಕ್ರಮ ಅನುಸರಿಸುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಿನ ಕೊರತೆಯನ್ನು ಸ್ವಲ್ಪ ಮಟ್ಟಿಗೆ ನಿವಾರಣೆ ಮಾಡಲಾಗುತ್ತಿದೆ’ ಎಂದು ಹೇಳಿದರು.
‘ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಬೆಳೆ ಬೆಳೆಯಲು ಸಾಲ ಸೌಲಭ್ಯ ನೀಡಲಾಗುತ್ತಿದ್ದು, ರೈತರಿಗೆ ಬೆಳೆಯ ವಿವರಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ರೈತರಿಗೆ ಉಪಯೋಗವಾಗುವಂತೆ ಕೃಷಿ ಹೊಂಡಗಳನ್ನು ನಿರ್ಮಿಸಿ ನೀರನ್ನು ಶೇಖರಣೆ ಮಾಡಲಾಗುತ್ತಿದೆ’ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಸ್ವಾಮಿ ಸಭೆಗೆ ಮಾಹಿತಿ ನೀಡಿದರು.
ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ನೀರಿನ ಸಮಸ್ಯೆ ಉಂಟಾಗದಿರಲು ಮಳೆ ನೀರು ಕೊಯ್ಲು ಪದ್ಧತಿಯನ್ನು ಅನುಷ್ಠಾನಗೊಳಿಸಲು ಡಿಡಿಪಿಐಗೆ ಸೂಚಿಸಿದರು.
ಸಭೆಯಲ್ಲಿ ಕೇಂದ್ರ ಜಲಮಂಡಳಿಯ ಸಂಜಯ್ ಶ್ರೀವತ್ಸ, ಬಲರಾಮ್ ಪ್ರಸಾದ್ ಭೀಮಲ್, ಕೆ.ಎ.ನಾಯ್ಡು, ಶ್ರೀಕಾಂತ್ ಕಂಬ್ಲೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶುಭಾ ಕಲ್ಯಾಣ್, ಜಿಲ್ಲಾಧಿಕಾರಿ ಕೆ.ರಾಕೇಶ್ ಕುಮಾರ್ ಹಾಜರಿದ್ದರು.