ಗುಬ್ಬಿ: ಸಮುದಾಯದ ರಕ್ಷಣೆಗೆ ಪೊಲೀಸ್ ಇಲಾಖೆಯು ಸದಾ ಸಿದ್ಧ. ಗ್ರಾಮಗಳಲ್ಲಿ ನಡೆಯುವ ಯಾವುದೇ ಪ್ರಕರಣಗಳನ್ನು ನಮ್ಮ ಗಮನಕ್ಕೆ ತಂದರೆ ನಾವು ಕ್ರಮ ಕೈಗೊಳ್ಳಲು ಸಿದ್ಧರಿದ್ದೇವೆ ಎಂದು ಗುಬ್ಬಿ ಪೊಲೀಸ್ ವೃತ್ತ ನಿರೀಕ್ಷಕ ರಾಮಕೃಷ್ಣಯ್ಯ ತಿಳಿಸಿದರು.
ಗುಬ್ಬಿ ಪಟ್ಟಣದಲ್ಲಿ ಏರ್ಪಡಿಸಿದ್ದ ದಲಿತ ಸಮುದಾಯದ ಕುಂದು-ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.
‘ಯಾರು ದೂರು ನೀಡಿದರೂ ನಾವು ಕ್ರಮ ಕೈಗೊಳ್ಳುತ್ತೇವೆ. ಪೊಲೀಸ್ ಇಲಾಖೆಯು ಎಲ್ಲರನ್ನೂ ಸೌಹಾರ್ದಯುತವಾಗಿ ಕಾಣಲು ಬಯಸುತ್ತದೆ. ಇಲಾಖೆಯ ಮಟ್ಟದಲ್ಲಿ ಬಗೆಹರಿಸಬಹುದಾದ ಯಾವುದೇ ಸಮಸ್ಯೆಗಳನ್ನು ನ್ಯಾಯಯುತವಾಗಿ ಪರಿಹರಿಸಿ ಕೊಡಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವುದು ತುಂಬಾ ಕಷ್ಟ. ಎಲ್ಲರಲ್ಲೂ ಸಾಮರಸ್ಯ ಮೂಡಿಸಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸುತ್ತೇವೆ’ ಎಂದು ಹೇಳಿದರು.
ಪೊಲೀಸ್ ಇಲಾಖೆಯು ಸಾರ್ವಜನಿಕರ ಹಿತಕ್ಕೋಸ್ಕರ ಸದಾ ಶ್ರಮಿಸುತ್ತಿದೆ. ಸಭೆಯಲ್ಲಿ ಹಾಜರಿದ್ದ ದಲಿತ ಮುಖಂಡರು ಅವರ ಕಷ್ಟಗಳ ಬಗ್ಗೆ ಹೇಳಿಕೊಂಡರು.
ವೃತ್ತ ನಿರೀಕ್ಷಕರು ಅದಕ್ಕೆ ಸ್ವಂದಿಸಿ ಸಮಸ್ಯೆ ಗಳನ್ನು ಬಗೆಹರಿಸಿ ಕೊಡುವುದಾಗಿ ಹೇಳಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಪ್ರಕರಣಗಳನ್ನು ಡಿವೈಎಸ್ಪಿ ಹಂತದಲ್ಲಿ ತನಿಖೆ ಮಾಡಿ ವಿಶೇಷ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ ನ್ಯಾಯ ಒದಗಿಸಲಾಗುವುದು. ಎಲ್ಲಾ ವಿಚಾರಣೆಯು ಪಾರದರ್ಶಕವಾಗಿರುತ್ತದೆ ಎಂದರು.