ಗುಬ್ಬಿ: ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದು 26 ತಿಂಗಳು ಕಳೆದರೂ ಮೀಸಲಾತಿ ಕುರಿತ ವಿವಾದ ನ್ಯಾಯಾಲಯದಲ್ಲಿ ಇದ್ದುದ್ದರಿಂದ ಯಾರೊಬ್ಬರೂ ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಗಿರಲಿಲ್ಲ.
ತಾಲ್ಲೂಕಿನಲ್ಲಿ ಪಟ್ಟಣ ಪಂಚಾಯಿತಿ ಅಸ್ತಿತ್ವಕ್ಕೆ ಬಂದಂದಿನಿಂದಲೂ ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡಕ್ಕೆ ನಿಗದಿಯಾಗಿತ್ತು. ಇದನ್ನು ಪ್ರಶ್ನಿಸಿ 19ನೇ ವಾರ್ಡ್ ಸದಸ್ಯ ಅಣ್ಣಪ್ಪಸ್ವಾಮಿ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಇತ್ತೀಚೆಗೆ ನ್ಯಾಯಾಲಯದ ತೀರ್ಪು ಬಂದಿದ್ದು, ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.
ಪಟ್ಟಣ ಪಂಚಾಯಿತಿಯ 19 ಸ್ಥಾನಗಳಲ್ಲಿ 11 ಸ್ಥಾನಗಳಲ್ಲಿ ಜಯಗಳಿಸಿದ್ದ ಜೆಡಿಎಸ್ ಅಧಿಕಾರ ಹಿಡಿಯಲು ಸಿದ್ಧವಾಗಿತ್ತು. ಆದರೆ ಮೀಸಲಾತಿ ಪಟ್ಟಿಯಿಂದ ನಿರಾಸೆಯಾಗಿದೆ. 6 ಸ್ಥಾನಗಳಲ್ಲಿ ಗೆದ್ದಿರುವ ಬಿಜೆಪಿಯಲ್ಲಿ ಮಾತ್ರ ಪರಿಶಿಷ್ಟ ಪಂಗಡದ ಅಭ್ಯರ್ಥಿ ಇದ್ದಾರೆ. ಬಹುಮತವಿದ್ದರೂ ಜೆಡಿಎಸ್ನಲ್ಲಿ ಪರಿಶಿಷ್ಟ ಪಂಗಡ ಅಭ್ಯರ್ಥಿ ಇಲ್ಲದ ಕಾರಣ ಅನಿವಾರ್ಯವಾಗಿ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕಾಗಿದೆ. ಹಾಗಾಗಿ 19ನೇ ವಾರ್ಡ್ನ ಬಿಜೆಪಿ ಸದಸ್ಯ ಅಣ್ಣಪ್ಪ ಸ್ವಾಮಿ ಅಧ್ಯಕ್ಷರಾಗುವುದು ಖಚಿತವಾಗಿದೆ .
ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಜೆಡಿಎಸ್ ಸದಸ್ಯರಾದಸವಿತ, ಮಂಗಳಮ್ಮ, ಕೆ. ಮಾಹಾಲಕ್ಷಿ ಸಾಮಾನ್ಯ ವರ್ಗದವರಾಗಿದ್ದು, ಉಪಾಧ್ಯಕ್ಷ ಸ್ಥಾನ ಅನಾಯಾಸವಾಗಿ ಜೆಡಿಎಸ್ಗೆ ದೊರಕಲಿದೆ.