ಈ ಬಾರಿ ಮುಂಗಾರು ಪೂರ್ವ ಬಿತ್ತನೆಯ ಹೆಸರು, ಅಲಸಂದೆ ಸ್ವಲ್ಪ ಮಟ್ಟಿಗೆ ಕೈ ಹಿಡಿದಿದೆ. ಆದರೆ ಹಿಂಗಾರು ಬಿತ್ತನೆ ಸಂಪೂರ್ಣ ನೆಲಕಚ್ಚಿದೆ. ಅಶ್ವಿನಿ, ಭರಣಿ, ಕೃತಿಕಾ, ರೋಹಿಣಿ ಮಳೆಗಳು ಕೆಲ ಕಡೆ ಮಾತ್ರ ಸೋನೆ ಸಿಂಚನವಾಗಿ ರೈತರಲ್ಲಿ ಹಿಂಗಾರು ಕೈ ಹಿಡಿಯುವ ಆಶಾಭಾವ ತೋರಿತ್ತು. ಆದರೆ ನಂತರದ ದಿನಗಳಲ್ಲಿ ಆಗಸ್ಟ್ ತಿಂಗಳ ಮಧ್ಯ ಭಾಗಕ್ಕೆ ಬಂದರೂ ಬಿತ್ತನೆಗೆ ಪೂರಕ ಮಳೆ ಆಗುತ್ತಿಲ್ಲ. ರೋಹಿಣಿ ಮಳೆ ನಂತರ ಮೃಗಶಿರಾ, ಆರ್ದ್ರಾ, ಪುಷ್ಯ, ಪುನರ್ವಸು ಮಳೆಗಳು ಸಂಪೂರ್ಣವಾಗಿ ಕೈ ಕೊಟ್ಟಿವೆ.