ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಗುಡ್ಡಗಾಡು ಪ್ರದೇಶದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಸಿಂಗದಹಳ್ಳಿ ರಾಜ್ಕುಮಾರ್ ಹೇಳಿದರು.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಎಸ್ಸಿ, ಎಸ್ಟಿ ಸಭೆಯಲ್ಲಿ ಮಾತನಾಡಿದರು.
ಬೇಸಿಗೆ ಬಂದರೆ ಹಳ್ಳಿಗಾಡಿನ ಜನರು ಗುಡ್ಡಕ್ಕೆ ಬೆಂಕಿ ಇಡುತ್ತಾರೆ. ಇದರಿಂದ ಎಷ್ಟೋ ಪ್ರಾಣಿ- ಪಕ್ಷಿಗಳ ಸಂತತಿ ಕಡಿಮೆಯಾಗುತ್ತದೆ. ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ಈಗ ನೆಟ್ಟಿರುವ ಗಿಡಗಳಿಗೆ ಬೇಸಿಗೆಯಲ್ಲಿ ನೀರು ಹಾಯಿಸಬೇಕು ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ 16-17ರಿಂದ 19-20ನೇ ಸಾಲಿನ ಮಾಹಿತಿ ಕೊಡಿ ಎಂದರೂ ಈವರೆಗೆ ಸಲ್ಲಿ ಸಿಲ್ಲ. ಎಸ್.ಸಿ, ಎಸ್.ಟಿಗೆ ಮೀಸಲಾಗಿ ಇಟ್ಟಿದ್ದ ಹಣದಲ್ಲಿ ಆ ಸಮುದಾಯಗಳ ಅಭಿವೃದ್ಧಿಗೆ ವಿನಿಯೋಗಿಸಬೇಕು ಎಂದರು.
ಜಿ.ಪಂ.ಸದಸ್ಯ ಮಹಲಿಂಗಯ್ಯ ಮಾತನಾಡಿ, ‘ತಾಲ್ಲೂಕಿನಲ್ಲಿರುವ ಎಷ್ಟೋ ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಇದರಿಂದ ಬೇಸಿಗೆಯಲ್ಲಿ ಮಕ್ಕಳಿಗೆ ತೊಂದರೆಯಾಗುತ್ತದೆ. ಶೌಚಾಲಯದ ವ್ಯವಸ್ಥೆಗಳಿಲ್ಲ. ಸೂಕ್ತ ಸೌಕರ್ಯ ಕಲ್ಪಿಸಬೇಕು’ ಎಂದರು.
ಪೌರ ಕಾರ್ಮಿಕರಿಗೆ ಅವರ ಆರೋಗ್ಯ ಮತ್ತು ಅಭಿವೃದ್ಧಿಗೆ ಪೌರ ಕಾರ್ಮಿಕರಿಗೆ ಮೀಸಲಿಟ್ಟ ಹಣ ಉಪಯೋಗಿಸುವಂತೆ ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅತಿಕ್ ಪಾಷ, ಸಮಾಜ ಕಲ್ಯಾಣಾಧಿಕಾರಿ ರೇಣುಕಾದೇವಿ ಭಾಗವಹಿಸಿದ್ದರು.