ತುಮಕೂರು: ‘ತಿಪಟೂರು ಬಳಿ ಶನಿವಾರ ಸಂಜೆ ಕೆ.ಬಿ.ಕ್ರಾಸ್ ಬಳಿ ಹತ್ಯಾಳು ನರಸಿಂಹಸ್ವಾಮಿ ಬೆಟ್ಟದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದು ಗಾಯಗೊಂಡವರಲ್ಲಿ ಇಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾ ಸಾರ್ವಜನಿಕ ಆಸ್ಪತ್ರೆ ಅಧೀಕ್ಷಕ ಡಾ.ವೀರಭದ್ರಯ್ಯ ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯ ವಿಚಾರಿಸಲು ಚಿಕ್ಕನಾಯಕನಹಳ್ಳಿ ಶಾಸಕ ಜೆ.ಸಿ.ಮಾಧುಸ್ವಾಮಿ ಭೇಟಿ ನೀಡಿದ ವೇಳೆ ಮಾಹಿತಿ ನೀಡಿದರು.
ಭುವನ್ (6), ಗಂಗಮ್ಮ (40) ಎಂಬ ಮಗು ಮತ್ತು ತಾಯಿಗೆ ತಲೆಗೆ ಪೆಟ್ಟಾಗಿತ್ತು. ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ನಿಮ್ಹಾನ್ಸ್ಗೆ ಕಳಿಸಲಾಗಿದೆ. ಇನ್ನುಳಿದ ಗಾಯಾಳುಗಳಲ್ಲಿ 9 ಮಂದಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೇಳಿದರು.
ಪರಿಹಾರ: ಶನಿವಾರ ನಡೆದ ಘಟನೆ ದುರದೃಷ್ಟಕರವಾದುದು. ಅಪಘಾತದಲ್ಲಿ ಮೃತಪಟ್ಟವರೆಲ್ಲ ಬಡಕುಟುಂಬದವರು. ಗಾಯಾಳುಗಳು ಇಂತಹದ್ದೇ ಕುಟುಂಬದವರಾಗಿದ್ದಾರೆ. ಕುಟುಂಬದವರಿಗೆ ಪರಿಹಾರ ದೊರಕಿಸಲು ಸರ್ಕಾರದ ಗಮನ ಸೆಳೆಯಲಾಗುವುದು. ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ’ ಎಂದು ಶಾಸಕ ಜೆ.ಸಿ.ಮಾಧುಸ್ವಾಮಿ ಹೇಳಿದರು.