ತುಮಕೂರು: ತಾಯಿ-ಮಗು ಮರಣವನ್ನು ಸಂಪೂರ್ಣವಾಗಿ ತಪ್ಪಿಸುವ ಮೂಲಕ ಜಿಲ್ಲೆಯನ್ನು ಅನೀಮಿಯಾ ಮುಕ್ತ ಜಿಲ್ಲೆ ಮಾಡಲು ಎಲ್ಲ ಆಶಾ ಕಾರ್ಯಕರ್ತೆಯರು ಶ್ರಮವಹಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವೀರಭದ್ರಯ್ಯ ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಕನ್ನಡ ಭವನದಲ್ಲಿಂದು ಹಮ್ಮಿಕೊಂಡಿದ್ದ ‘ಪ್ರಧಾನ ಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಮತ್ತು ಅನೀಮಿಯಾ ಮುಕ್ತ ಭಾರತ್’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಧಾನ ಮಂತ್ರಿ ಸುರಕ್ಷತಾ ಮಾತೃತ್ವ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ಹೆಚ್ಚು ಸ್ತ್ರೀರೋಗ ತಜ್ಞರು ನೋಂದಾಯಿಸಿಕೊಂಡು ಸೇವೆ ಸಲ್ಲಿಸುತ್ತಿದ್ದಾರೆ. ಇದು ರಾಜ್ಯದಲ್ಲಿಯೇ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ತಿಳಿಸಿದರು.
ಚರಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಸವರಾಜ್, ಕಾರ್ಯಕರ್ತರು, ವೈದ್ಯರು ಸೇರಿದಂತೆ ಆರೋಗ್ಯ ಇಲಾಖೆಯ ಎಲ್ಲ ಅಧಿಕಾರಿಗಳ ಶ್ರಮದಿಂದ ತಾಯಿಯ ಮರಣ ಕಳೆದ 20 ವರ್ಷಗಳಿಂದ ಕಡಿಮೆಯಾಗುತ್ತಿದೆ. ಅಲ್ಲದೆ, ತಾಯಿಗೆ ತಗಲುವ ಸೋಂಕಿನ ಪ್ರಮಾಣ ಕೂಡಾ ಕಡಿಮೆಯಾಗಿದೆ ಎಂದರು.
ಕಾನೂನುಗಳ ಬಿಗಿ ವ್ಯವಸ್ಥೆ, ಜನರಿಗೆ ಮೂಡಿರುವ ಜಾಗೃತಿಯಿಂದಾಗಿಯೂ ತಾಯಿಯ ಮರಣ ಕಡಿಮೆಯಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ, ರಾಜ್ಯದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯದ ಸಲಹೆಗಾರ ಡಾ.ನಿಖಿಲ್, ಆರ್.ಸಿ.ಹೆಚ್. ಅಧಿಕಾರಿ ಡಾ.ಕೇಶವ್ರಾಜ್, ಡಾ.ಹನುಮಕ್ಕ ಸೇರಿದಂತೆ ತಾಲ್ಲೂಕು ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.