ತುಮಕೂರು: ಜಿಲ್ಲೆಯ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಇತ್ತೀಚೆಗೆ ದಾರಿ ತಪ್ಪುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಇಲ್ಲಿ ಶನಿವಾರ ಆತಂಕ ವ್ಯಕ್ತಪಡಿಸಿದರು.
ನಗರದ ಗಾಜಿನಮನೆಯಲ್ಲಿ ಎರಡು ದಿನಗಳಿಂದ ನಡೆದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಜಿಲ್ಲೆ ಹೆಸರಾಗಿದೆ. ಆದರೆ ಇತ್ತೀಚೆಗೆ ಯಾಕೋ, ಏನೋ ದಾರಿ ತಪ್ಪಿಸಿಕೊಳ್ಳುತ್ತಿದೆ ಎಂಬ ಭಾವನೆ ಮೂಡುತ್ತಿದೆ. ಸಾಹಿತ್ಯ, ಸಂಸ್ಕೃತಿಗೆ ಹೆಚ್ಚಿನ ಉತ್ತೇಜನ ನೀಡಬೇಕು. ಬೇರೆ ಭಾಷೆಗಳು ನಮ್ಮ ಜೀವನಕ್ಕೆ ಸಹಾಯ ಆಗಬಹುದು. ಆದರೆ ಕನ್ನಡ ತಾಯಿ ಭಾಷೆಯಂತೆ. ಅದನ್ನು ಮರೆಯಲು ಸಾಧ್ಯವಿಲ್ಲ ಎಂದರು.
ಈ ಹಿಂದಿನ ಸರ್ಕಾರ ವಿಶ್ವವಿದ್ಯಾಲಯಕ್ಕೆ ಹಣ ಕೊಡದೆ ‘ಹಾಗೆ ಸಾಯಲಿ’ ಎಂದು ಬಿಟ್ಟಂತೆ ಕಾಣುತ್ತಿದೆ. ಈಗ ಹೆಚ್ಚಿನ ಅನುದಾನ ತಂದು ಸಮಗ್ರವಾಗಿ ವಿ.ವಿಯ ಹೊಸ ಕ್ಯಾಂಪಸ್ ಅಭಿವೃದ್ಧಿ ಮಾಡಲು ಶ್ರಮಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ‘ಕನ್ನಡ ಉಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆಲವರು ಸಭೆಗಳಲ್ಲಿ ಕನ್ನಡ ಬಗ್ಗೆ ಮಾತನಾಡಿ ಮಕ್ಕಳನ್ನು ಇಂಗ್ಲಿಷ್ ಶಾಲೆಗೆ ಸೇರಿಸುತ್ತಾರೆ. ಮಕ್ಕಳಿಗೆ ಪ್ರಾಥಮಿಕ ಭಾಷೆಯಾಗಿ ಕನ್ನಡ ಕಲಿಸಬೇಕು. ಕನ್ನಡ ಭಾಷಣಕ್ಕೆ ಸೀಮಿತವಾಗಬಾರದು. ಭಾಷೆಯ ಹಿರಿಮೆ ಹೆಚ್ಚುವಂತೆ ನಡೆದುಕೊಳ್ಳಬೇಕು’ ಎಂದು ತಿಳಿಸಿದರು.
ಶಾಸಕ ಬಿ.ಸುರೇಶ್ಗೌಡ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಚಿದಾನಂದ್ ಎಂ.ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮುಖಂಡರಾದ ಜಿ.ಚಂದ್ರಶೇಖರಗೌಡ, ಇಕ್ಬಾಲ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಇತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.