ತುಮಕೂರು: ನಗರದ ಬಿ.ಎಚ್.ರಸ್ತೆಗೆ ಪರ್ಯಾಯವಾಗಿರುವ ರೈಲ್ವೆ ನಿಲ್ದಾಣ ರಸ್ತೆಯನ್ನು ಸ್ಮಾರ್ಟ್ಸಿಟಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಜ್ಯೋತಿಗಣೇಶ್ ತಿಳಿಸಿದರು.
ರೈಲ್ವೆ ನಿಲ್ದಾಣ ರಸ್ತೆ ಸಮೀಪ ರಸ್ತೆ ಕಾಮಗಾರಿ ವೀಕ್ಷಿಸಿ ಮಾತನಾಡಿ, ‘ಬಿ.ಎಚ್.ರಸ್ತೆಯ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಕಿರಿದಾದ ಈ ರಸ್ತೆ ವಿಸ್ತರಣೆಗೆ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಸಹಕಾರ ನೀಡಿದ್ದಾರೆ. ಅದಕ್ಕೆ ಇಲ್ಲಿನ ನಿವಾಸಿಗಳಿಗೆ ಧನ್ಯವಾದಗಳು’ ಎಂದು ಹೇಳಿದರು.
ಸ್ಮಾರ್ಟ್ಸಿಟಿ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ. ಈ ಯೋಜನೆ ಮೂಲಕ ರಸ್ತೆ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ನಗರದ ಜನರಿಗೆ ಅನುಕೂಲ ಆಗಲಿದೆ ಎಂದು ಹೇಳಿದರು.
ಪಾಲಿಕೆ ಸದಸ್ಯೆ ಗಿರಿಜಾ ಮಾತನಾಡಿ, ‘30 ವರ್ಷಗಳಿಂದ ಈ ರಸ್ತೆ ಅಭಿವೃದ್ಧಿ ಕಂಡಿಲ್ಲ. ಜನರು ತೊಂದರೆ ಅನುಭವಿಸುತ್ತಿದ್ದರು. ನಾಲ್ಕೈದು ವಾರ್ಡ್ಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಅತ್ಯುತ್ತಮವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಇದರಿಂದ ಈ ಭಾಗದಲ್ಲಿರುವ ಶಾಲಾ ಕಾಲೇಜುಗಳು, ಆಸ್ಪತ್ರೆ, ಹಾಸ್ಟೆಲ್ಗಳಿಗೆ ಅನುಕೂಲ ಆಗಲಿದೆ’ ಎಂದು ಹೇಳಿದರು.
ಈ ರಸ್ತೆಯಲ್ಲೇ ಸೈಕಲ್ ಟ್ರ್ಯಾಕ್, ವೆಂಡರ್ ಝೂನ್, ಆಟೊ ನಿಲ್ದಾಣ ಮತ್ತು ಬೈಕ್ ನಿಲುಗಡೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಎಂಜಿನಿಯರ್ಗಳಾದ ಅಶೋಕ್, ರಶ್ಮಿ, ರವಿವರ್ಮಕುಮಾರ್, ಎಸ್ಡಿಎಲ್ ಅಶೋಕ್, ಸ್ಥಳೀಯರಾದ ನಾಗರಾಜಪ್ಪ, ರವೀಶ್, ಪಾಲಿಕೆ ಮತ್ತು ಸ್ಮಾರ್ಟ್ಸಿಟಿ ಅಧಿಕಾರಿಗಳು ಹಾಜರಿದ್ದರು.