ತುಮಕೂರು: ಸಂವಿಧಾನ ಇರುವುದು ಕೇವಲ ಆಡಳಿತಕ್ಕಾಗಿ ಅಲ್ಲ. ಜನರ ಆಶೋತ್ತರಗಳ ಈಡೇರಿಕೆಗಾಗಿ. ಇತಿಹಾಸವನ್ನು ಅರಿತುಕೊಳ್ಳದ ಹೊರತು ವರ್ತಮಾನ ಅರಿತುಕೊಳ್ಳಲು ಸಾಧ್ಯವಿಲ್ಲ ಎಂದು ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಖಂಡಿಮಠ ಹೇಳಿದರು.
ವಿಶ್ವವಿದ್ಯಾನಿಲಯದ ಕಲಾ ಕಾಲೇಜಿನ ಸಭಾಂಗಣದಲ್ಲಿ ರಾಜ್ಯಶಾಸ್ತ್ರ ವಿಭಾಗದಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ‘ಭಾರತೀಯ ಸಂವಿಧಾನದ ಅಂತರ್ಗತ ಮೌಲ್ಯಗಳು’ ಕುರಿತು ಉಪನ್ಯಾಸ ನೀಡಿದರು.
ಭಾರತ ಸಂವಿಧಾನ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಗೌರವಿಸುವುದು ನಮ್ಮ ಜವಾಬ್ದಾರಿ. ವಿಷಯವನ್ನು ತಿಳಿದುಕೊಂಡವರೆಲ್ಲ ಜ್ಞಾನಿಗಳಲ್ಲ. ಜನಸಾಮಾನ್ಯರಿಗೆ ಸಂವಿಧಾನದ ಅರಿವು ಮೂಡಿಸುವ ಅಗತ್ಯವಿದೆ ಎಂದರು.
ಯಾವುದೇ ವಿಷಯವನ್ನು ಜೀವನಕ್ಕೆ ಅಳವಡಿಸಿಕೊಂಡರೆ ಮಾತ್ರ ಜೀವನ ಅರ್ಥಪೂರ್ಣವಾಗುತ್ತದೆ. ಸಂವಿಧಾನದ ಅಂತರ್ಗತ ಮೌಲ್ಯಗಳನ್ನು ಅರಿತುಕೊಳ್ಳಬೇಕು. ನಮ್ಮ ದೇಶದ ವೈವಿಧ್ಯವನ್ನು ಜೀವಂತವಾಗಿ ಇರಿಸುವುದೇ ಸಂವಿಧಾನದ ಆಶಯ. ಸಂವಿಧಾನವನ್ನು ವಿದ್ಯಾರ್ಥಿಗಳು ಪ್ರೀತಿಸಬೇಕು ಎಂದು ಕಿವಿಮಾತು ಹೇಳಿದರು.
ಕಲಾ ಕಾಲೇಜಿನ ಪ್ರಾಂಶುಪಾಲ ಕೆ.ರಾಮಚಂದ್ರಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಟಿ.ಎನ್. ಹರಿಪ್ರಸಾದ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀಪಾದ ಕುಲಕರ್ಣಿ ಇದ್ದರು.