ತುಮಕೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಆದೇಶಗಳನ್ನು ಜನರು ಪಾಲಿಸಬೇಕು. ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವವರು ಸಹ ತಮ್ಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಶಾಸಕ ಡಿ.ಸಿ.ಗೌರಿಶಂಕರ್ ಸಲಹೆ ನೀಡಿದರು.
ತಾಲ್ಲೂಕಿನ ನಿಡವಳಲು ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯರು, ಪೊಲೀಸರು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ 50 ಸಾವಿರ ಮಾಸ್ಕ್, 2,500 ಸ್ಯಾನಿಟೈಸರ್ ಹಾಗೂ ನೀರಿನ ಬಾಟಲಿಗಳನ್ನು ವಿತರಿಸಿ ಮಾತನಾಡಿದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಚಾರವಾಗಿ ಅಧಿಕಾರಿಗಳು ಜನರನ್ನು ಉತ್ತೇಜಿಸಬೇಕು. ಆಹಾರ ಇಲಾಖೆಯಿಂದ ವಿತರಿಸುವ ಪಡಿತರವನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕ್ರಮವಹಿಸಬೇಕು. ಯಾವುದೇ ಕಾರಣಕ್ಕೂ ಜನರು ಗುಂಪು ಸೇರದಂತೆ ನಿಗಾ ಇಡಬೇಕು ಎಂದು ತಿಳಿಸಿದರು.
ಜೆಡಿಎಸ್ ಗ್ರಾಮಾಂತರ ಘಟಕದ ಅಧ್ಯಕ್ಷ ಹಾಲನೂರು ಅನಂತ್ಕುಮಾರ್, ವಿಷ್ಣುವರ್ಧನ್ ಹಾಗೂ ಮುಖಂಡರು ಇದ್ದರು.