ತುಮಕೂರು: ಎಲ್ಲರು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಒಬ್ಬ ವ್ಯಕ್ತಿ, ಸದೃಢ ಶಕ್ತಿಯಾಗಿ ಬೆಳೆಯಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಜಿ.ಪಂ ಸಿಇಒ ಜಿ.ಪ್ರಭು ತಿಳಿಸಿದರು.
ನಗರದಲ್ಲಿ ಬುಧವಾರ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ವತಿಯಿಂದ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕಾರ್ಯಾಗಾರ, ಪ್ರೇರಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತರಗತಿಯಿಂದ ಆಚೆ ಹೊರಗಿನ ಪ್ರಪಂಚದಲ್ಲಿ ಕಲಿಯುವುದು ಶೇ 50 ರಷ್ಟು ಇರುತ್ತದೆ. ಬಾಹ್ಯ ಚಟುವಟಿಕೆಗಳ ಬಗ್ಗೆ ತಿಳಿದುಕೊಳ್ಳುವ, ಪ್ರಶ್ನಿಸುವ ಮನೋಭಾವ ರೂಢಿಸಿಕೊಳ್ಳಬೇಕು. ನಿರ್ಣಯ ತೆಗೆದುಕೊಳ್ಳುವುದನ್ನು ಕಲಿಯಬೇಕು. ಹೊರಗಿನ ಪ್ರಪಂಚದಿಂದ ನಾಯಕತ್ವದ ಗುಣ ಬರುತ್ತದೆ. ಎಲ್ಲವನ್ನು ತಿಳಿದುಕೊಳ್ಳಬೇಕು. ಸಮಗ್ರ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.
ಎಲ್ಲ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಜೀವನದ ಪಯಣವನ್ನು ಒಂದು ಕ್ರೀಡೆ ಎಂದು ಭಾವಿಸಬೇಕು. ನಿರಂತರ ಪರಿಶ್ರಮ, ಅಭ್ಯಾಸ, ಉತ್ಸಾಹ, ಛಲ, ಹಠದಿಂದ ಮುನ್ನಡೆಯಬೇಕು. ಈ ಎಲ್ಲ ಅಂಶಗಳು ನಿಮ್ಮಲ್ಲಿ ಆತ್ಮವಿಶ್ವಾಸ ತುಂಬುತ್ತವೆ ಎಂದರು.