ತುಮಕೂರು: ನಗರ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ಧಿ ಕಾಣುತ್ತಿದ್ದು, ನಗರದಲ್ಲಿ ನೆಲೆಸುವ ಜನಸಂಖ್ಯೆಯೂ ಹೆಚ್ಚುತ್ತಿದೆ. ಅದಕ್ಕೆ ಅನುಗುಣವಾಗಿ ಮತ್ತಷ್ಟು ರೈಲುಗಳ ಸಂಖ್ಯೆ ಹೆಚ್ಚಳ ಮಾಡಬೇಕು ಎಂದು ಸಂಸದ ಜಿ.ಎಸ್.ಬಸವರಾಜು ಹೇಳಿದರು.
ರೈಲ್ವೆ ಪ್ರಯಾಣಿಕರ ವೇದಿಕೆ ಭಾನುವಾರ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು. ನಗರದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡುವಂತೆ ರೈಲ್ವೆ ಮಂಡಳಿ ಹಾಗೂ ರೈಲ್ವೆ ಸಚಿವರ ಜತೆಗೆ ಚರ್ಚಿಸಿದ್ದೇನೆ ಎಂದರು.
ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಯಾಗಿದೆ. ಕೈಗಾರಿಕಾ ಪ್ರದೇಶವಾಗಿಯೂ ಗುರುತಿಸಿಕೊಂಡಿದೆ. ಬೆಂಗಳೂರು ಬಿಟ್ಟು ನಗರಕ್ಕೆ ಬಂದು ನೆಲೆಸುವವರ ಸಂಖ್ಯೆ ಹೆಚ್ಚಳವಾಗಿದೆ. ಜನರ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು ತುಮಕೂರು– ಬೆಂಗಳೂರು ನಡುವೆ ರೈಲು ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಮಹಾನಗರ ಪಾಲಿಕೆ ಸದಸ್ಯೆ ಗಿರಿಜಾ ಧನಿಯಾಕುಮಾರ್, ‘ಪುರಸ್ಕಾರಗೊಂಡ ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಮಾದರಿಯಾಗಿ ಬೆಳೆದು ಸಮಾಜಕ್ಕೆ ಆದರ್ಶರಾಗಬೇಕು’ ಎಂದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿದರು. ವೇದಿಕೆ ಅಧ್ಯಕ್ಷೆ ಬಾ.ಹ.ರಮಾಕುಮಾರಿ, ನೈಋತ್ಯ ರೈಲ್ವೆ ಹುಬ್ಬಳ್ಳಿಯ ಸಹಾಯಕ ವಾಣಿಜ್ಯ ಅಧಿಕಾರಿ ಡಿ.ಧನಂಜಯ, ರೋಟರಿ ತುಮಕೂರು ಅಧ್ಯಕ್ಷ ಸಿ.ನಾಗರಾಜ್, ರೋಟರಿ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಎಸ್.ಎಲ್.ಕಾಡದೇವರ ಮಠ್, ವೇದಿಕೆ ಪ್ರಧಾನ ಕಾರ್ಯದರ್ಶಿ ಕರಣಂ ರಮೇಶ್, ಇನ್ನರ್ ವ್ಹೀಲ್ ಅಧ್ಯಕ್ಷೆ ಭಾಗ್ಯಲಕ್ಷ್ಮಿ ನಾಗರಾಜ್, ವೇದಿಕೆ ಪದಾಧಿಕಾರಿಗಳಾದ ಮಂಜೇಶ್, ಪರಮೇಶ್, ರಘು ರಾಮಚಂದ್ರಯ್ಯ, ಸಗರ ಚಕ್ರವರ್ತಿ, ರಾಮಾಂಜನೇಯ, ಆರ್.ಬಾಲಾಜಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.