ತುಮಕೂರು: ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ತಾಲ್ಲೂಕಿನ ಮಸಣಾಪುರಕ್ಕೆ ಸೋಮವಾರ ಭೇಟಿ ನೀಡಿ ಗ್ರಾಮದ ಸಾವಯವ ರೈತ ಎಂ.ಎಸ್.ಮೃತ್ಯುಂಜಯ ಅವರ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳನ್ನು ವೀಕ್ಷಿಸಿದರು.
ಎಂಟು ಎಕರೆಯಲ್ಲಿ ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡು, ಕೃಷಿಯಲ್ಲಿ ಯಶಸ್ಸು ಕಂಡ ಬಗ್ಗೆ ರೈತರಿಂದ ಮಾಹಿತಿ ಪಡೆದರು.
ಇತರೆ ರೈತರು ಮೃತ್ಯುಂಜಯ ಅವರನ್ನು ಮಾದರಿಯಾಗಿ ತೆಗೆದುಕೊಂಡು ಸಮಗ್ರ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡರೆ ಉತ್ತಮ ಆದಾಯ ಲಭ್ಯವಾಗಲಿದೆ. ಈ ನಿಟ್ಟಿನಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ರೈತರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಸಚಿವ ಗಿರಿರಾಜ್ ಸಿಂಗ್ ಅಂಜೂರ ಹಣ್ಣಿನ ರುಚಿ ಸವಿದರು. ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ಜಿ.ಪಂ ಸಿಇಒ ಕೆ.ವಿದ್ಯಾಕುಮಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರಾಜಸುಲೋಚನಾ ಇದ್ದರು.