ತುಮಕೂರು: ‘ಸಿರಿಧಾನ್ಯ ಬಳಕೆಯಿಂದ ಆರೋಗ್ಯ ವೃದ್ಧಿಸುತ್ತದೆ. ನಗರದಲ್ಲಿಯೇ ಹೊಸದಾಗಿ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳ ಮಳಿಗೆಯನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಮಧುಗಿರಿ ಕೃಷಿ ಉಪನಿರ್ದೇಶಕ ಅಶೋಕ್ ಹೇಳಿದರು.
ತುಮಕೂರು ಜಿಲ್ಲೆ ಪ್ರಾಂತೀಯ ಸಹಕಾರ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ವತಿಯಿಂದ ನಗರದ ಎಂ.ಜಿ ರಸ್ತೆಯಲ್ಲಿ ಸಾವಯವ ಮತ್ತು ಸಿರಿಧಾನ್ಯ ಉತ್ಪನ್ನಗಳ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾ ಪ್ರಾಂತೀಯ ಸಾವಯವ ಕೃಷಿಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ‘ಗ್ರಾಹಕರಿಗೆ ಸುಲಭ ರೀತಿಯಲ್ಲಿ ಸದಾ ಕಾಲ ಸಾವಯವ ಮತ್ತು ಸಿರಿಧಾನ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಈ ಮಳಿಗೆಗಳನ್ನು ತೆರೆಯಲಾಗಿದ್ದು, ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.
ಕೃಷಿ ಉಪನಿರ್ದೇಶಕ ಉಮೇಶ್, ಸಹಾಯಕ ಕೃಷಿ ನಿರ್ದೇಶಕ ಕೆಂಗೇಗೌಡ, ವಿಷಯ ತಜ್ಞೆ ಭಾಗ್ಯಮ್ಮ, ಉಪಾಧ್ಯಕ್ಷ ಚಂದ್ರಶೇಖರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು, ಒಕ್ಕೂಟದ ಅಧಿಕಾರಿಗಳು ಹಾಜರಿದ್ದರು.