ತುಮಕೂರು: ಈಗಾಗಲೇ ಶ್ರಾವಣ ಮಾಸ ಆರಂಭವಾಗಿದ್ದು, ಸಾಲು ಸಾಲು ಹಬ್ಬಗಳು ಬರುತ್ತಿವೆ. ವರಮಹಾಲಕ್ಷ್ಮಿ ಹಬ್ಬಕ್ಕೆ ಇನ್ನು ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಹೂವಿನ ಬೆಲೆ ಗಗನ ಮುಟ್ಟಿದೆ. ಹಣ್ಣು ಹಾಗೂ ಇತರೆ ಸಾಮಗ್ರಿಗಳ ದರವೂ ತೀವ್ರ ಏರಿಕೆ ಕಂಡಿದೆ.
ವರಮಹಾಲಕ್ಷ್ಮಿ ಹಬ್ಬಕ್ಕೆ ಈಗಲೇ ಖರೀದಿ ಜೋರಾಗಿದ್ದು, ಅಂತರಸನಹಳ್ಳಿ ಮಾರುಕಟ್ಟೆಯಲ್ಲಿ ಜನಜಂಗುಳಿ ಕಂಡುಬಂತು. ಮಂಗಳವಾರ ಸೇವಂತಿಗೆ ಹೂವು ಒಂದು ಮಾರು ₹350 ರಿಂದ ₹400ರ ವರೆಗೆ ಮಾರಾಟವಾಗಿದೆ. ವರಮಹಾಲಕ್ಷ್ಮಿ ಹಬ್ಬ ಸಮೀಪಿಸುತ್ತಿದ್ದಂತೆ ಹೂವಿನ ಬೆಲೆ ಮತ್ತಷ್ಟು ಜಾಸ್ತಿಯಾಗಬಹುದು. ಗುರುವಾರದ ವೇಳೆಗೆ ಇನ್ನೂ ದುಬಾರಿಯಾಗಲಿದೆ. ಕಳೆದ ಎರಡುಮೂರು ದಿನಗಳಿಂದ ಬಾಳೆ ಹಣ್ಣಿನ ಬೆಲೆ ಕೆ.ಜಿ ₹120ಕ್ಕೆ ಏರಿಕೆಯಾಗಿದ್ದು, ಹಬ್ಬದ ವೇಳೆಗೆ ಮತ್ತಷ್ಟು ದುಬಾರಿಯಾಗಲಿದೆ.
ಗುಲಾಬಿ ಕೆ.ಜಿ ₹400, ಕಾಕಡ ಮಾರು ₹200, ಚೆಂಡು ಹೂವು ಮಾರು ₹80 ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಸೇಬು ಕೆ.ಜಿ ₹150ರಿಂದ ₹200, ಸಪೋಟ ₹160, ಪೈನಾಪಲ್ ₹120ರಿಂದ ₹180ಕ್ಕೆ ಹೆಚ್ಚಳವಾಗಿದೆ.
ಹಬ್ಬಕ್ಕೆ ಮುಂಚಿತವಾಗಿಯೇ ನಗರದಲ್ಲಿ ಪೈನಾಪಲ್, ಸಪೋಟ ಹಣ್ಣುಗಳ ಸಂಗ್ರಹ ಜೋರಾಗಿತ್ತು. ಸಾರ್ವಜನಿಕರು ಅಂತರಸನಹಳ್ಳಿ ಮಾರುಕಟ್ಟೆ, ಬಾಳನಕಟ್ಟೆ ಸೇರಿದಂತೆ ವಿವಿಧೆಡೆ ಹಣ್ಣು, ಹೂವು ಖರೀದಿಯಲ್ಲಿ ತೊಡಗಿಸಿಕೊಂಡಿರುವ ದೃಶ್ಯಗಳು ಕಂಡು ಬಂದವು.
ಹಬ್ಬ ಸಮೀಪಿಸುತ್ತಿದ್ದಂತೆ ಬೆಲೆ ಏರಿಕೆಯಾಗಬಹುದು ಎಂಬ ಆತಂಕದಿಂದ ಮುಂಚಿತವಾಗಿ ಅಗತ್ಯ ಸಾಮಗ್ರಿ ಖರೀದಿಗೆ ಜನರು ಮುಂದಾಗಿದ್ದಾರೆ.