ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ ಕಟ್ಟುನಿಟ್ಟು: ಎಲ್ಲೆಡೆ ಸ್ತಬ್ಧ

ಸಕಾರಣವಿಲ್ಲದೆ ಸಂಚರಿಸುತ್ತಿದ್ದ ವಾಹನಗಳು ಪೊಲೀಸರ ವಶಕ್ಕೆ
Last Updated 11 ಮೇ 2021, 4:36 IST
ಅಕ್ಷರ ಗಾತ್ರ

ತುಮಕೂರು: ಲಾಕ್‌ಡೌನ್ ಕಟ್ಟುನಿಟ್ಟು ಜಾರಿಯಿಂದಾಗಿ ಸೋಮವಾರ ನಗರ ಹಾಗೂ ಜಿಲ್ಲೆ ಬಹುತೇಕ ಸ್ತಬ್ಧಗೊಂಡಿದೆ. ಹಿಂದಿನ ವಾರ ಕರ್ಫ್ಯೂ ಜಾರಿಯಲ್ಲಿದ್ದ ಸಮಯದಲ್ಲಿ ಸಂಚಾರಕ್ಕೆ ಅವಕಾಶ ಸಿಕ್ಕಿದಂತೆ ಈಗಲೂ ಸಿಗಬಹುದು ಎಂದುಕೊಂಡು ಬಂದವರು ತೊಂದರೆಗೆ ಸಿಲುಕಿದರು. ಕೆಲವರು ಪೊಲೀಸರ ಕೈಗೆ ಸಿಲುಕಿ ಒದ್ದಾಡಿದರು.

ನಗರದಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸರು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಸಕಾರಣವಿಲ್ಲದೆ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡರು.

ನಗರ ಪ್ರವೇಶಿಸುವ ಹಾಗೂ ನಗರದಿಂದ ಹೊರಗೆ ಹೋಗುವ ವಾಹನಗಳನ್ನು ತಪಾಸಣೆ ಮಾಡಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಂತರ ಜಿಲ್ಲೆಗಳನ್ನು ಸಂಪರ್ಕಿಸುವ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದು, ಹೊರ ಜಿಲ್ಲೆಯ ವಾಹನಗಳು ಜಿಲ್ಲೆ ಪ್ರವೇಶಿಸದಂತೆ ತಡೆದರು. ಜಿಲ್ಲೆಯಿಂದಲೂ ಹೊರಕ್ಕೆ ಹೋಗಲು ಬಿಡಲಿಲ್ಲ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಯಿತು.

ಹಿಂದಿನ ದಿನಗಳಿಗೆ ಹೋಲಿಸಿದರೆ ಸೋಮವಾರ ವಾಹನ ಹಾಗೂ ಜನ ಸಂಚಾರ ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಇತ್ತು. ಹಲವರು ಹತ್ತಾರು ಕಾರಣಗಳನ್ನು ಹೇಳಿಕೊಂಡು ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದರು. ಸಕಾರಣ ಇದ್ದವರಿಗೂ ಸಂಚರಿಸಲು ಪೊಲೀಸರು ಕಿರಿಕಿರಿ ಮಾಡಿದರು. ನಗರದ ಬಟವಾಡಿ ಮಿರ್ಜಿ ಪೆಟ್ರೋಲ್ ಬಂಕ್ ಬಳಿ ಬೆಳಿಗ್ಗೆ 7.30ರ ಸಮಯದಲ್ಲಿ ಗುರುತಿನ ಕಾರ್ಡ್ ತೋರಿಸಿದವರಿಗೂ ಸಂಚರಿಸಲು ಅಡ್ಡಿಪಡ್ಡಿಸಿ ನಿಂದಿಸಿ ಕಳುಹಿಸಿದರು. ಕೆಲವು ಪೊಲೀಸರು ಸೌಜನ್ಯ ಮೀರಿ ವರ್ತಿಸಿದರು.

ಬೆಳಿಗ್ಗೆ 6ರಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಬೆಳಿಗ್ಗೆ ಸ್ವಲ್ಪ ಮಟ್ಟಿಗೆ ವಾಹನಗಳ ಸಂಚಾರ ಇತ್ತು. 10 ಗಂಟೆ ನಂತರ ತಗ್ಗಿತು. ಅಗತ್ಯ ಇರುವವರು, ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡವರು
ಸಂಚರಿಸಿದರು.

ಲಾಕ್‌ಡೌನ್‌ ಜಾರಿಯಿಂದಾಗಿ ನಗರದಲ್ಲಿ ಬಹುತೇಕ ಚಟುವಟಿಕೆಗಳು ಸ್ಥಗಿತಗೊಂಡವು. ಕಂದಾಯ, ನೀರು ಸರಬರಾಜು, ನಗರ ಸ್ಥಳೀಯ ಸಂಸ್ಥೆಗಳು, ಬ್ಯಾಂಕ್‌ಗಳು ಸೇರಿದಂತೆ ಕೆಲವು ಕಚೇರಿಗಳು ಕಾರ್ಯ ನಿರ್ವಹಿಸಿದವು. ಕೆಲವು ಹೋಟೆಲ್‌ಗಳು ತೆರೆದಿದ್ದವು. ಊಟ, ತಿಂಡಿಯನ್ನು ಪಾರ್ಸೆಲ್ ನೀಡಲಾಯಿತು. ಮಧ್ಯಾಹ್ನದ ವೇಳೆಗೆ ವಾಹನಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಸಂಜೆ ವೇಳೆಗೆ ಸ್ವಲ್ಪ ಮಟ್ಟಿಗೆ ಓಡಾಟ ಕಂಡುಬಂತು. ಉಳಿದಂತೆ ನಗರ ಸ್ತಬ್ಧಗೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT