ತುಮಕೂರು: ಜಿಲ್ಲೆಯನ್ನು ಬರಪೀಡಿತ ಎಂದು ಘೋಷಣೆ ಮಾಡಿದ್ದು, ಬೇಸಿಗೆಯಲ್ಲಿ ತಲೆದೋರುವ ಕುಡಿಯುವ ನೀರಿನ ಸಮಸ್ಯೆಯ ದೂರುಗಳನ್ನು 24 ಗಂಟೆಯೊಳಗೆ ಬಗೆಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್ ಅವರು ಹೋಬಳಿವಾರು ನೇಮಿಸಿರುವ ನೋಡಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆದು ಸಹಾಯವಾಣಿ ಸಂಖ್ಯೆ: 0816–2260202 ಸ್ಥಾಪಿಸಿದ್ದು, 24X7 ಕಾರ್ಯನಿರ್ವಹಿಸಲಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಎಲ್ಲ ಶಾಖೆಗಳ ಸಿಬ್ಬಂದಿ ಮುಂದಿನ ಆದೇಶದವರೆಗೆ ಪ್ರತಿ ದಿನ ದಿನಂಪ್ರತಿ ಪುನರಾವರ್ತನೆಯಾಗಿ ಈ ಕಂಟ್ರೋಲ್ ರೂಂನಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.
ನಿಯೋಜಿತ ಸಿಬ್ಬಂದಿ ಸಹಾಯವಾಣಿ ಮೂಲಕ ಸ್ವೀಕರಿಸಲಾದ ದೂರುಗಳನ್ನು ದಿನಾಂಕ, ಸಮಯ, ದೂರುದಾರರ ವಿವರ ಹಾಗೂ ದೂರಿನ ಸ್ವರೂಪದೊಂದಿಗೆ ದಾಖಲಾತಿಯಲ್ಲಿ ನಮೂದಿಸಬೇಕು. ಪ್ರತಿದಿನ ದಾಖಲಾಗುವ ದೂರುಗಳನ್ನು ಆ ದಿನವೇ ಸಂಬಂಧಪಟ್ಟ ಶಾಖಾ ವ್ಯವಸ್ಥಾಪಕರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
ನೀರಿನ ಸಮಸ್ಯೆ; ಸಹಾಯವಾಣಿಗೆ ಕರೆ ಮಾಡಿ: ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದಲ್ಲಿಯೂ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ಗ್ರಾಮಸ್ಥರು ಕುಡಿಯುವ ನೀರಿಗೆ ಸಂಬಂಧಿಸಿದ ದೂರುಗಳನ್ನು ಸಹಾಯವಾಣಿಗೆ ಕರೆ ಮಾಡುವ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಸಿಇಒಹೇಳಿದ್ದಾರೆ.
ಸಹಾಯವಾಣಿಗೆ ದೂರು ದಾಖಲಿಸಬಹುದಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಹೋಬಳಿವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ನಿಯೋಜಿತ ಅಧಿಕಾರಿಗಳು ಪ್ರತಿದಿನ ಸಂಬಂಧಿಸಿದ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆ ತಲೆದೋರುವ ಕಡೆ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.