ತುಮಕೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ 2 ಕೋಟಿ ಉದ್ಯೋಗ ಸೃಷ್ಟಿಸಲಾಗುವುದು ಎಂದು ಆ ಪಕ್ಷದ ಮುಖಂಡರು ಹೇಳಿದ್ದರು. ಆದರೆ ಉದ್ಯೋಗ ಸೃಷ್ಟಿಯ ಬದಲಿಗೆ ಜನರು ಇರುವ ಉದ್ಯೋಗವನ್ನೇ ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಫೀಕ್ ಅಹಮದ್ ಆರೋಪಿಸಿದರು.
ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಬುಧವಾರಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಸಲುವಾಗಿ ಹಮ್ಮಿಕೊಂಡಿದ್ದ ತುಮಕೂರು ನಗರ ಹಾಗೂ ಗ್ರಾಮಾಂತರ ಕ್ಷೇತ್ರದ ಪಕ್ಷದ ಮುಖಂಡರು, ಮಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಪದವೀಧರರಿಗೆ ನಿರುದ್ಯೋಗ ಭತ್ಯೆ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿತ್ತು. ಈ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲವಾಗಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಇರುವ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಿಕೊಡಬೇಕು ಎಂದು ಸಲಹೆ ಮಾಡಿದರು.
ಕಾಯಿದೆ, ಕಾನೂನು ರೂಪಿಸುವಲ್ಲಿ ವಿಧಾನ ಪರಿಷತ್ ಸದಸ್ಯರ ಪಾತ್ರ ಮಹತ್ವದ್ದಾಗಿದೆ. ಅನುಭವಿ, ಚಿಂತಕರಾದ ರಮೇಶ್ ಬಾಬು ಅವರನ್ನು ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷ ಕಣಕ್ಕಿಳಿಸಿದೆ. ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಐದು ಜಿಲ್ಲೆಗಳನ್ನು ಒಳಗೊಂಡ ಕ್ಷೇತ್ರದಲ್ಲಿ ಸುಮಾರು 1.09 ಲಕ್ಷ ಮತದಾರರಿದ್ದು, ಜಿಲ್ಲೆಯಲ್ಲೇ 30 ಸಾವಿರ ಮತದಾರರಿದ್ದಾರೆ. ತುಮಕೂರು ನಗರ ಮತ್ತು ಗ್ರಾಮಾಂತರದಲ್ಲಿ ಸುಮಾರು 9 ಸಾವಿರ ಮತದಾರರಿದ್ದಾರೆ ಎಂದು ಹೇಳಿದರು.
ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್ಬಾಬು ಮಾತನಾಡಿ, ‘ಅ.28ಕ್ಕೆ ಮತದಾನ ನಡೆಯಲಿದ್ದು, ಮಧ್ಯದಲ್ಲಿ ಆಯುಧಪೂಜೆ ರಜೆ ಇದೆ. ಉಳಿದಿರುವ ಅತ್ಯಲ್ಪ ಅವಧಿಯಲ್ಲಿ ಎಲ್ಲಾ ಮತದಾರರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಮತದಾರರನ್ನು ಪಕ್ಷದ ಕಾರ್ಯಕರ್ತರು ತಲುಪಬೇಕು’ ಎಂದು ಮನವಿ ಮಾಡಿದರು.