ಕುಣಿಗಲ್: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮೀಣ ಪ್ರದೇಶದಲ್ಲಿ ಅನಧಿಕೃತ ಮದ್ಯ ಮಾರಾಟ ದಂಧೆ ಹೆಚ್ಚಿದ್ದು, ಇದನ್ನು ನಿಯಂತ್ರಿಸಬೇಕೆಂದು ನಾಗರಿಕ ಸಮಿತಿ ಸದಸ್ಯರು ಪೊಲೀಸ್ ಅಧಿಕಾರಿಗಳನ್ನು ಒತ್ತಾಯಿಸಿದರು.
ಶುಕ್ರವಾರ ಸಂಜೆ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಶಿವರುದ್ರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ನಾಗರಿಕ ಸಮಿತಿ ಸದಸ್ಯರ ಸಭೆಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಸದಸ್ಯರು, ಇ-ಬೀಟ್ ವ್ಯವಸ್ಥೆ ಸಂಪೂರ್ಣ ಕಡಿಮೆಯಾಗಿದ್ದು, ಹೆಚ್ಚುವರಿ ಪಾಯಿಂಟ್ ಅಳವಡಿಸಿ ಹೆಚ್ಚಿನ ಗಸ್ತಿಗೆ ಕ್ರಮ ಕೈಗೊಳ್ಳಬೇಕು.
ಪಟ್ಟಣದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಸಂಚಾರ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಇದರ ಲಾಭ ಪಡೆದು ಹದ್ದುಮೀರಿ ವರ್ತಿಸುವ ಆಟೊ ಚಾಲಕರು ಹಾಗೂ ಫುಟ್ಪಾತ್ ವ್ಯಾಪಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಹಾವಳಿ ಹೆಚ್ಚಿವೆ. ಪುರಸಭೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಇವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಕೊಳೆಗೇರಿ ಮತ್ತು ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮಾದಕ ಪದಾರ್ಥಗಳ ಮಾರಾಟ ಗಣನೀಯವಾಗಿ ಹೆಚ್ಚುತ್ತಿದೆ. ಸಂಜೆ ವೇಳೆ ಕುಡುಕರ ಹಾವಳಿ ಹೆಚ್ಚಿದ್ದು, ನಿಯಂತ್ರಿಸಬೇಕು ಎಂದು ಆಗ್ರಹಿಸಿದರು.
ಸಿಪಿಐ ಬಿ.ಕೆ.ಶೇಖರ್, ಪಿಎಸ್ಐ ಚನ್ನಯ್ಯ ಹಿರೇಮಠ್, ಸಮಿತಿ ಪ್ರಮುಖರಾದ ನಂಜುಂಡಯ್ಯ (ರಾಜಣ್ಣ), ಎಸ್ಟಿಡಿ ಶ್ರೀನಿವಾಸ್, ಕೆ.ಎಸ್.ಬಲರಾಂ, ಎಪಿಎಂಸಿ ಅಧ್ಯಕ್ಷ ಸುರೇಶ್, ಅಶ್ವತ್ಥಮ್ಮ, ರಾಮಚಂದ್ರಯ್ಯ, ವೆಂಕಟಸುಬ್ಬಯ್ಯ, ಕರವೇ ಅಧ್ಯಕ್ಷ ಮಂಜುನಾಥ್, ಕಸಾಪ ಅಧ್ಯಕ್ಷ ದಿನೇಶ್ಕುಮಾರ್ ಉಪಸ್ಥಿತರಿದ್ದರು.