ಮಧುಗಿರಿ: ‘ರಾಜ್ಯ ಸರ್ಕಾರ ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ರಾಜ್ಯದ ನಾಲ್ಕು ತಾಲ್ಲೂಕುಗಳಲ್ಲಿ ಜಾರಿಗೊಳಿಸಿದೆ. ತಾಲ್ಲೂಕಿನಲ್ಲಿ ಯೋಜನೆ ಪ್ರಾಯೋಗಿಕವಾಗಿ ಯಶಸ್ವಿಯಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಉಮಾ ಮಹದೇವನ್ ತಿಳಿಸಿದರು.
ತಾಲ್ಲೂಕಿನ ನೀಲಿಹಳ್ಳಿ, ತಿಪ್ಪಗೊಂಡನಹಳ್ಳಿ, ಬಸವನಹಳ್ಳಿ, ಜಡೆಗೊಂಡನಹಳ್ಳಿ, ಬಿಟ್ಟನಕುರಿಕೆ, ದಬ್ಬೆಗಟ್ಟ, ಗುಂಡ್ಲಹಳ್ಳಿ, ತುಂಗೋಟಿ ಹಾಗೂ ಮಲ್ಲೇನಹಳ್ಳಿ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಶನಿವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಮಧುಗಿರಿ, ಹೆಗ್ಗಡದೇವನಕೋಟೆ, ಮಾನ್ವಿ, ಜಮಖಂಡಿ ತಾಲ್ಲೂಕುಗಳಲ್ಲಿ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಂಡಿದೆ’ ಎಂದರು.‘ಯೋಜನೆ ಸಫಲವಾಗಲು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಹಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಶ್ರಮ ವಹಿಸಿ ಕೆಲಸ ಮಾಡುತ್ತಿರುವುದು ಸಂತಸ ತಂದಿದೆ’ ಎಂದು ಹೇಳಿದರು.
‘ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ ₹ 8 ಲಕ್ಷ ವೆಚ್ಚದಲ್ಲಿ 22 ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಸ್ಥಳ ಗುರುತಿಸಿ ತಕ್ಷಣ ವರದಿ ಸಲ್ಲಿಸುವಂತೆ’ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ರಾಜ್ ಅವರು ಮುಖ್ಯಾಧಿಕಾರಿ ಜಿ.ನವೀನ್ಚಂದ್ರ ಅವರಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಆಯುಕ್ತ ವಿಜಯ ಭಾಸ್ಕರ್, ತಹಶೀಲ್ದಾರ್ ಎಚ್.ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಂಜೇಗೌಡ, ಸಿಡಿಪಿಒ ಕೆಂಪಹನುಮಯ್ಯ, ವೈದ್ಯಾಧಿಕಾರಿ ಡಾ.ರವೀಶ್, ಮೇಲ್ವಿಚಾರಕಿ ಚಾಂದಿಬಾಯಿ ಇದ್ದರು.