ಪಾವಗಡ: ಸಮರ್ಪಕ ಪಡಿತರ ಚೀಟಿ ವಿತರಣೆ, ತಾಲ್ಲೂಕಿನ ವಸತಿ ರಹಿತರ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ತಿಂಗಳು ಕಳೆದರೂ ಪಡಿತರ ಚೀಟಿ ನೀಡಿಲ್ಲ. ಅರ್ಹರ ಪಡಿತರ ಚೀಟಿಯನ್ನು ಎಸ್ಎಂಎಸ್ ಕಳುಹಿಸಿಲ್ಲ ಎಂಬ ಕಾರಣಕ್ಕೆ ಕಾರ್ಡ್ಗಳನ್ನು ರದ್ದುಗೊಳಿಸಲಾಗಿದೆ ಎಂದು ಶಾಸಕ ಕೆ.ಎಂ.ತಿಮ್ಮರಾಯಪ್ಪ ಹೇಳಿದರು.
ಆಹಾರ ಭದ್ರತೆ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ. ಯೋಜನೆ ದೋಷ ಸರಿಪಡಿಸಬೇಕು ಒತ್ತಾಯಿಸಿದರು. ‘ಅಧಿಕಾರಿಗಳು ಪಡಿತರ ವಿತರಣಾ ಕೇಂದ್ರಗಳ ಏಜೆಂಟ್ರೊಂದಿಗೆ ಶಾಮೀಲಾಗಿದ್ದಾರೆ’ ಎಂದು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ತಿಮ್ಮಾರೆಡ್ಡಿ ಆರೋಪಿಸಿದರು.
ಒಂದು ವಾರದೊಳಗಾಗಿ ಅರ್ಹರಿಗೆ ಪಡಿತರ ಚೀಟಿ ವಿತರಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ಪಡಿತರ ಆಂದೋಲನ ನಡೆಸಿ ಸ್ಥಳೀಯವಾಗಿ ಪಡಿತರ ಚೀಟಿ ನೀಡುವಂತೆ ಆಗ್ರಹಿಸಿದರು.
ಮನವಿ ಸ್ವೀಕರಿಸಿದ ತಹಶೀಲ್ದಾರ್ ತಿಮ್ಮಾಭೋವಿ, ಆಹಾರ ಇಲಾಖೆ ಉಪ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಒಂದು ವಾರದೊಳಗಾಗಿ ಪಡಿತರ ಚೀಟಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಮೂರು ದಿನಗಳ ಕಾಲ ಅರಿವು ಕಾರ್ಯಕ್ರಮ ನಡೆಸಲಾಗುವುದು. ಪಡಿತರ ಆಂದೋಲನದ ಮೂಲಕ ಸ್ಥಳೀಯವಾಗಿ ಪಡಿತರ ವಿತರಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ಜಿ.ಪಂ. ಉಪಾಧ್ಯಕ್ಷ ಆರ್.ಸಿ.ಆಂಜಿನಪ್ಪ, ತಾ.ಪಂ. ಅಧ್ಯಕ್ಷ ಚಂದ್ರಶೇಖರ್, ಪುರಸಭೆ ಅಧ್ಯಕ್ಷ ಸುಧಾಕರರೆಡ್ಡಿ, ಮಾಜಿ ಅಧ್ಯಕ್ಷ ಶಂಕರರೆಡ್ಡಿ, ತಾಲ್ಲೂಕು ಜೆಡಿಎಸ್ ಘಟಕದ ಅಧ್ಯಕ್ಷ ವೆಂಕಟರಾಮರೆಡ್ಡಿ, ಸದಸ್ಯ ಮಹೇಶ್, ಮಣಿ, ವಸಂತ್, ಮುಖಂಡ ಗೋವಿಂದಪ್ಪ, ಅಕ್ಕಲಪ್ಪ, ಬಲರಾಮ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.