ಪಾವಗಡ: ಪಟ್ಟಣದ ಮಾಜಿ ಶಾಸಕ ಸೋಮ್ಲಾನಾಯ್ಕ ಅವರನ್ನು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾದುಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಮಾಜಿ ಶಾಸಕ ಸೋಮ್ಲಾನಾಯ್ಕ ಜನತಾ ಪಕ್ಷದಲ್ಲಿ ಶಾಸಕರಾಗಿದ್ದರು. ಬಿಜೆಪಿಯಿಂದ 2 ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾದುಸ್ವಾಮಿ ಅವರು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಮುಖಂಡರೊಂದಿಗೆ ಪಟ್ಟಣದ ಸೋಮ್ಲಾ ನಾಯ್ಕ ಅವರ ಮನೆಯಲ್ಲಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಬಲ ಕೋರುವುದರ ಜೊತೆಗೆ ಮುಂಬರುವ ವಿಧಾನಸಭೆ ಚುನಾವಣೆ ಗಮನದಲ್ಲಿ ಇಟ್ಟುಕೊಂಡು ಈ ಮಾತುಕತೆ ನಡೆಸಲಾಗಿದೆ. ಇದಕ್ಕಾಗಿ ವಿಧಾನ ಪರಿಷತ್ ಚುನಾವಣೆಯನ್ನು ವೇದಿಕೆಯನ್ನಾಗಿ ಮಾಡಿಕೊಳ್ಳಲಾಗಿದೆ ಎಂದು ತಾಲ್ಲೂಕಿನ ರಾಜಕೀಯ ವಲಯದಲ್ಲಿ ವಿಶ್ಲೇಷಣೆ ನಡೆದಿದೆ.
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ರವಿಶಂಕರ ನಾಯ್ಕ್, ಜಿಲ್ಲಾ ಉಪಾದ್ಯಕ್ಷ ರವಿ, ಮುಖಂಡ ಡಾ.ಜಿ.ವೆಂಕಟರಾಮಯ್ಯ ಇದ್ದರು.