ತುಮಕೂರು: ತಾಲ್ಲೂಕಿನ ಆಹಾರ ಇಲಾಖೆಯ ಶಿರಸ್ತೆದಾರ್ ಒಬ್ಬರ ಎರಡು ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ಬುಧವಾರ ಏಕ ಕಾಲಕ್ಕೆ ದಾಳಿ ನಡೆಸಿದರು.
ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿರಸ್ತೆದಾರ್ ಟಿ.ಕೆ.ಲಕ್ಷ್ಮೀನಾರಾಯಣರೆಡ್ಡಿ ಅವರ ನಿವಾಸಗಳ ಮೇಲೆ ಈ ದಾಳಿ ನಡೆಯಿತು.
ನಗರದ ಅಶೋಕನಗರ ನಾಲ್ಕನೇ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಹೊಸ ನಿವಾಸದ ಮೇಲೂ ದಾಳಿ ನಡೆಯಿತು. ಎರಡು ಮನೆಗಳ ಮೌಲ್ಯ ರೂ. 95 ಲಕ್ಷ ಎಂದು ಅಂದಾಜಿಸಲಾಗಿದೆ. ಸುಮಾರು ರೂ. 70 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಚಿನ್ನ, ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.