ಚಿತ್ರದುರ್ಗ: ‘ನಾನು ಯಾವ ನಟರನ್ನೂ ಪ್ರಚಾರಕ್ಕೆ ಆಹ್ವಾನಿಸಿಲ್ಲ. ಸ್ಟಾರ್ ನಟರು ಒಂದು ಕಡೆ ಬಿಜೆಪಿ, ಮತ್ತೊಂದು ಕಡೆ ಕಾಂಗ್ರೆಸ್, ಜೆಡಿಎಸ್ ಅಂತಾರೆ. ಅವರಿಗೆ ಯಾವ ಬದ್ಧತೆ ಇದೆ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ನಾಯಕನಹಟ್ಟಿಯಲ್ಲಿ ಶನಿವಾರ ಚುನಾವಣಾ ಪ್ರಚಾರಕ್ಕೆ ಮುನ್ನ ಗುರು ತಿಪ್ಪೇರುದ್ರಸ್ವಾಮಿ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
‘ಶ್ರೀರಾಮುಲು ಮತ್ತು ಸಿದ್ದರಾಮಯ್ಯಗೆ ಸೋಲಿನ ಭೀತಿ ಹೆಚ್ಚಾಗಿದೆ. ಅದಕ್ಕಾಗಿ ಅವರು ಚಿತ್ರನಟರ ಮೊರೆಹೋಗಿದ್ದಾರೆ’ ಎಂದು ವ್ಯಂಗ್ಯವಾಡಿದರು.
‘ಮೋದಿಗಾಗಲಿ, ಸಿದ್ದರಾಮಯ್ಯಗಾಗಲಿ ನಮ್ಮ ವಿರುದ್ಧ ಮಾತನಾಡಲು ವಿಷಯವಿಲ್ಲ. ಹೀಗಾಗಿ ಅವರು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ದೂರುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.