ಉಡುಪಿ: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಕೊರೊನಾ ಫ್ರಂಟ್ಲೈನ್ ವರ್ಕರ್ಸ್ ಎಂದು ಘೋಷಿಸಲಾಗಿದ್ದರೂ ಮರಣ ವಿಮಾ ಪರಿಹಾರ ಮೊತ್ತ ಪಾವತಿಸುವಲ್ಲಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಆರ್.ಶೇಷಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
‘ಇತರೆ ಕೊರೊನಾ ವಾರಿಯರ್ಸ್ ಮೃತಪಟ್ಟರೆ ₹ 50 ಲಕ್ಷ ಪರಿಹಾರ ನೀಡಲಾಗುತ್ತಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮೃತಪಟ್ಟರೆ ₹ 30 ಲಕ್ಷ ನೀಡಲಾಗುತ್ತಿದೆ. ಈ ತಾರತಮ್ಯ ನಿವಾರಣೆಯಾಗಬೇಕು. ಕಾರ್ಯಕರ್ತೆಯರಿಗೆ ಹಾಗೂ ಕುಟುಂಬದ ಸದಸ್ಯರಿಗೂ ಉಚಿತ ವೈದ್ಯಕೀಯ ಸೌಲಭ್ಯ ಹಾಗೂ ವಿಮೆ ನೀಡಬೇಕು ಎಂದು ಅಂಗನವಾಡಿ ನೌಕರರ ಜಿಲ್ಲಾ ಸಂಘದ ಕಾರ್ಯದರ್ಶಿ ಸುಶೀಲಾ ನಾಡ ಒತ್ತಾಯಿಸಿದರು.
ಪೋಷಣ್ ಟ್ರ್ಯಾಕರ್ ಮೊಬೈಲ್ ಆ್ಯಪ್ನಲ್ಲಿ ನೋಂದಾಯಿತ ಫಲಾನುಭವಿಗಳಿಗೆ ಮಾತ್ರ ಸರ್ಕಾರ ಪೌಷ್ಟಿಕ ಆಹಾರ ಸರಬರಾಜು ಮಾಡಲು ನಿರ್ಧರಿಸಿದೆ. ಪೋಷಣ್ ಟ್ರ್ಯಾಕರ್ ಬಳಸದ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಕಡಿತ ಮಾಡಲು ನಿರ್ಧರಿಸಿರುವುದು ಖಂಡನೀಯ. ಪೋಷಣ್ ಟ್ರ್ಯಾಕರ್ ವ್ಯವಸ್ಥೆಯನ್ನು ತೆಗೆದುಹಾಕಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ನ್ಯೂಟ್ರಿ ಗಾರ್ಡನ್ ಮಾಡಲು ಸೂಚನೆ ನೀಡಲಾಗಿದೆ. ಆದರೆ, ರಾಜ್ಯದಲ್ಲಿರುವ ಹೆಚ್ಚಿನ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಹೀಗಿರುವಾಗ ನ್ಯೂಟ್ರಿ ಗಾರ್ಡನ್ ಮಾಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
45 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ದುಡಿಯುತ್ತಿದ್ದರೂ ನೌಕರರು ಎಂದು ಪರಿಗಣಿಸಿ ಜೀವನ ಭದ್ರತೆ ಒದಗಿಸಿಲ್ಲ. ಕಾರ್ಮಿಕ ಸಮ್ಮೇಳನಗಳ ಶಿಫಾರಸುಗಳನ್ನು ಸರ್ಕಾರ ಅನುಷ್ಠಾನಗೊಳಿಸಿಲ್ಲ. ನೌಕರಿ ಕಾಯಂಗೊಳಿಸಿ, ನಿವೃತ್ತಿ ಸೌಲಭ್ಯ ಹಾಗೂ ಸೇವಾ ಜೇಷ್ಠತೆ ಆಧಾರದ ಮೇಲೆ ಹಿರಿಯ ಮೇಲ್ವಿಚಾರಕರ ಹುದ್ದೆಗಳಿಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ, ಉಡುಪಿ ತಾಲ್ಲೂಕು ಅಧ್ಯಕ್ಷೆ ಅಂಬಿಕಾ, ಕಾರ್ಯದರ್ಶಿ ಪ್ರಮೀಳಾ, ಕಾಪು ವಲಯದ ಗೀತಾ ಪಾಂಗಳ, ಕುಂದಾಪುರ ತಾಲ್ಲೂಕು ಅಧ್ಯಕ್ಷೆ ಆಶಾಲತಾ, ಬ್ರಹ್ಮಾವರ ಕಾರ್ಯದರ್ಶಿ ಯಶೋಧಾ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಇದ್ದರು.