ಉಡುಪಿ: ಆಟಿಸಂ ಹಾಗೂ ಮಾನಸಿಕ ಕಾಯಿಲೆಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅಭಿಪ್ರಾಯಪಟ್ಟರು.
ಸೋಮವಾರ ಜಿಲ್ಲಾಡಳಿತ ಹಾಗೂ ವಿವಿಧ ಇಲಾಕೆಗಳ ಸಹಯೋಗದಲ್ಲಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಕಮಲ ಬಾಳಿಗಾ ಚಾರಿಟೆಬಲ್ ಟ್ರಸ್ಟ್ ನೆರವಿನೊಂದಿಗೆ ಜಿಲ್ಲೆಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ವಿವಿದ್ದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ 2 ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಗ್ರಾಮೀಣ ಭಾಗಗಳಲ್ಲಿ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಗ್ರಾಮಸ್ಥರಿಗೆ ಮಾಹಿತಿ ನೀಡುವ ಕಾರ್ಯವನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಸಮರ್ಪಕವಾಗಿ ಮಾಡಬೇಕು ಎಂದು ಸಲಹೆ ನೀಡಿದರು.
ತರಬೇತಿ ಶಿಬಿರದ ಮಾಹಿತಿಯನ್ನು ಗ್ರಾಮೀಣ ಭಾಗಗಳಿಗೆ ತಲುಪಿಸುವ ಕಾರ್ಯ ಆಗಬೇಕು. ಇದರಿಂದ ಸರ್ಕಾರದ ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಮನೋವೈದ್ಯ ಡಾ.ಪಿ.ವಿ.ಭಂಡಾರಿ ಮಾತನಾಡಿ, ಮಾನಸಿಕ ಕಾಯಿಲೆಗಳನ್ನು ಅಂಗವೈಕಲ್ಯ ಎಂದು ಸರ್ಕಾರ ಪರಿಗಣಿಸಿದೆ. ಆರಂಭದಲ್ಲಿಯೇ ಅಂಗವೈಕಲ್ಯ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು. ಅಂಗವೈಕಲ್ಯಕ್ಕೆ ಥೆರಪಿಯ ಮೂಲಕ ಚಿಕಿತ್ಸೆ ನೀಡುವುದು ಬಹಳ ಪರಿಣಾಮಕಾರಿ.ಅಂಗವೈಕಲ್ಯಕ್ಕೆ ಚಿಕಿತ್ಸೆ ನೀಡುವ ವಿಧಾನವನ್ನು ಶೀಘ್ರ ಅಂಗನವಾಡಿ ಕಾರ್ಯಕರ್ತೆಯರಿಗೂ ನೀಡಲಾಗುವುದು ಎಂದರು.
ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರತ್ನಾ, ಡಿಎನ್ಎ ಸಂಸ್ಥೆಯ ಅಧಿಕಾರಿ ಕುಮಾರಸ್ವಾಮಿ, ಡಾ.ತಿಪ್ಪೇಸ್ವಾಮಿ, ಪೂರ್ಣಿಮಾ ಭಟ್ ಇದ್ದರು.
ಆಟಿಸಂ ಸೊಸೈಟಿಯ ಕೀರ್ತೇಶ್ ಸ್ವಾಗತಿಸಿದರು. ಆಸ್ಪತ್ರೆ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ವಂದಿಸಿದರು. ಸಮಾಲೋಚಕಿ ದೀಪಶ್ರೀ, ಸುಚಿತ್ರ ಕಾರ್ಯಕ್ರಮ ನಿರೂಪಿಸಿದರು.