ಉಡುಪಿ: ಉಪ ಚುನಾವಣೆಯಲ್ಲಿ ಬಿಜೆಪಿ 15 ಸ್ಥಾನಗಳಲ್ಲೂ ಗೆಲ್ಲಲಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ದಿನದಿಂದಲೇ ಚುನಾವಣೆ ಗೆಲ್ಲಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.
ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿ ಸರ್ಕಾರವನ್ನು ಆರಿಸಿದ್ದಾರೆ. ಉಪ ಚುನಾವಣೆಯಲ್ಲೂ ನಿಶ್ಚಿತವಾಗಿ ಗೆಲುವು ಸಿಗಲಿದೆ ಎಂದರು.
ಶಾಸಕರ ಅನರ್ಹತೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಾಮಪತ್ರ ಸಲ್ಲಿಸಲು ಕಾಲಾವಕಾಶ ಇದೆ. ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯಲಿದೆ. ಒಂದೇ ದಿನದಲ್ಲಿ ಎಲ್ಲವೂ ಇತ್ಯರ್ಥ ಆಗಬಹುದು ಎಂಬ ವಿಶ್ವಾಸವಿದೆ ಎಂದರು.
ಅನರ್ಹ ಶಾಸಕರು ಮೊದಲು ಬಿಜೆಪಿ ಸೇರಲಿದ್ದಾರೆ. ನಂತರ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದರೆ ಬಿಜೆಪಿಯಿಂದಲೇ ಕಣಕ್ಕಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.