ಉಡುಪಿ: ಕಾರ್ಮಿಕ ವರ್ಗದ ಚಳವಳಿಯ ಇತಿಹಾಸವಿರುವ ಉಡುಪಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಸಿಐಟಿಯುನ 15 ನೇ ರಾಜ್ಯ ಸಮ್ಮೇಳನ ನಡೆಯುತ್ತಿದೆ. ನ.15 ರಿಂದ 17ರವರೆಗೆ ಕುಂದಾಪುರದ ಆರ್.ಎನ್ ಶೆಟ್ಟಿ ಸಭಾಭವನದಲ್ಲಿ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಿಐಟಿಯು ರಾಜ್ಯ ಕಾರ್ಯದರ್ಶಿ ಪ್ರತಾಪ್ ಸಿಂಹ ಹೇಳಿದರು.
ಭಾನುವಾರ ಉಡುಪಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ (ಸಿಡಬ್ಲ್ಯೂಎಫ್ಐ-ಸಿಐಟಿಯು) ಕಚೇರಿಯಲ್ಲಿ 15ನೇ ಸಮ್ಮೇಳನದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಬಂಡವಾಳಶಾಹಿಗಳ ಪರವಾದ ಕಾನೂನುಗಳಿಗೆ ತಿದ್ದುಪಡಿಗೆ ವಿರೋಧ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಪಡುತ್ತಿರುವ ಕಷ್ಟಗಳು, ಜಿಲ್ಲೆಯ ಅಭಿವೃದ್ಧಿಯನ್ನು ಕಡೆಗಣಿಸಿರುವ ವಿಚಾರಗಳ ಕುರಿತು ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ.
ಜನಸಾಮಾನ್ಯರ ಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹಾಗೂ ಹೋರಾಟ ರೂಪಿಸುವಲ್ಲಿ ಸಮ್ಮೇಳನದಲ್ಲಿ ವಿಚಾರ ವಿನಿಮಯ ನಡೆಯಲಿದ್ದು, ರಾಜ್ಯದ ವಿವಿಧ ಜಿಲ್ಲೆಗಳಿಂದ 600 ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಬಾಲಕ್ರಷ್ಣ ಶೆಟ್ಟಿ ಮಾತನಾಡಿ, ‘ಕಾರ್ಮಿಕರ ಐಕ್ಯತೆ ಹಾಗೂ ಸೌಹಾರ್ದತೆಯ ಘೋಷಣೆಯೊಂದಿಗೆ ಸಮ್ಮೇಳನ ನಡೆಸಲಾಗುತ್ತಿದೆ. ಕರಾವಳಿಯ ಸಾಂಸ್ಕೃತಿಕ ಹಿನ್ನೆಲೆ, ಸೌಹಾರ್ದತೆಯನ್ನು ಗಟ್ಟಿಗೊಳಿಸುವಂತಹ ಸಂದೇಶವನ್ನು ಹೊಂದಿರುವ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದರು.
ಸಮ್ಮೇಳನದ ಗೌರವಾಧ್ಯಕ್ಷ ಕೆ.ಶಂಕರ್, ಖಜಾಂಚಿ ಎಚ್.ನರಸಿಂಹ, ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಸಿಐಟಿಯು ಉಡುಪಿ ತಾಲ್ಲೂಕು ಅಧ್ಯಕ್ಷ ರಾಮ ಕಾರ್ಕಡ ಮಾತನಾಡಿದರು.
ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ಶೇಖರ ಬಂಗೇರ, ಸಿಐಟಿಯು ಉಡುಪಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕವಿರಾಜ್, ಶಶಿಧರ ಗೊಲ್ಲ ಇದ್ದರು. ಪ್ರಚಾರ ಸಮಿತಿ ಸಂಚಾಲಕ ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.