ಶಿರ್ವ: ಉಡುಪಿ ಜಿಲ್ಲಾ ಪಂಚಾಯಿತಿ, ಸ್ವಚ್ಛ ಭಾರತ್ ಮಿಷನ್, ಕಟಪಾಡಿ ಗ್ರಾಮ ಪಂಚಾಯಿತಿ, ಡಾ. ನಾನಾಸಾಹೇಬ ಧರ್ಮಾಧಿಕಾರಿ ಪ್ರತಿಷ್ಠಾನ ವತಿಯಿಂದ ಕಟಪಾಡಿ ಬಸ್ ನಿಲ್ದಾಣದ ಬಳಿ ಹಮ್ಮಿಕೊಳ್ಳಲಾದ ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾನುವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿ, ‘ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಮುತ್ತಲಿನ ಪರಿಸರದಲ್ಲಿ ಗ್ರಾಮಸ್ಥರು ಸ್ವ ಇಚ್ಛೆಯಿಂದ ಪ್ರತಿ ನಿತ್ಯ ಸ್ವಚ್ಛತೆಯನ್ನು ಕಾಯ್ದುಕೊಂಡಲ್ಲಿ ಯಾವುದೇ ಅಭಿಯಾನಗಳನ್ನು ಹಮ್ಮಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗದು’ ಎಂದರು.
ಕಟಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಭಾ ಬಿ ಶೆಟ್ಟಿ, ಉಪಾಧ್ಯಕ್ಷ ಸುಗುಣಾ, ಕಟಪಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಮತಾ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಸ್ಥಳೀಯ ಆಟೊ ಚಾಲಕರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಇದ್ದರು.