ಉಡುಪಿ: ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಾತ್ರ ಹಾರ, ತುರಾಯಿ, ಕಾಣಿಕೆ ನೀಡಬಾರದು ಎಂದು ಆದೇಶಿಸಲಾಗಿದೆ. ಖಾಸಗಿ ಸಮಾರಂಭಗಳಲ್ಲಿ ನೀಡಲು ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಗುರುವಾರ ಜಿಲ್ಲಾ ಆಸ್ಪತ್ರೆಯ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಹೂವಿನ ವ್ಯಾಪಾರಿಗಳಿಗೆ ತೊಂದರೆ ಕೊಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.
‘ರಸ್ತೆಗಳ ಬದಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮುಖ್ಯಮಂತ್ರಿಗೆ ಶುಭ ಕೋರುವಂತಹ ಹೋರ್ಡಿಂಗ್ಗಳನ್ನು ಹಾಕದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ಮನವಿ ಮಾಡುತ್ತೇನೆ. ಮುಖ್ಯಮಂತ್ರಿ ನಾಡಿನ ಸೇವಕ ಎಂಬ ಭಾವನೆಗೆ ಧಕ್ಕೆಯಾಗಬಾರದು ಎಂಬುದು ಇದರ ಹಿಂದಿರುವ ಉದ್ದೇಶ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವಾರ್ಪಣೆ ಸಲ್ಲಿಕೆಯನ್ನು ನಿಲ್ಲಿಸಲಾಗಿದೆ. ಮುಖ್ಯಮಂತ್ರಿ ಬಂದಾಗ, ಹೋಗುವಾಗ ಗೌರವಾರ್ಪಣೆ ಸಲ್ಲಿಸುವ ಅವಶ್ಯಕತೆ ಇಲ್ಲ. ನಿರ್ದಿಷ್ಟ ಪೊಲೀಸ್ ಸಮಾರಂಭಗಳಲ್ಲಿ ಮಾತ್ರ ನಡೆಯಬೇಕು ಎಂದು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.