ಬೈಂದೂರು: ‘ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದ, ಬಡವರೇ ಇದ್ದ ದೇಶದಲ್ಲಿ ಎಲ್ಲರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂಬುದನ್ನು 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಟೀಕಿಸುವವರು ಅರಿತುಕೊಳ್ಳಬೇಕಿದೆ’ ಎಂದು ಕಾಂಗ್ರೆಸ್ ಮುಖಂಡ ವಿನಯ ಕುಮಾರ್ ಸೊರಕೆ ಹೇಳಿದರು.
ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಬುಧವಾರ ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಾದ ನಂತರ ಅಂಬೇಡ್ಕರ್ ಭವನದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಅನೇಕ ಮಹಾನ್ ಪುರುಷರು ಕುಟುಂಬವನ್ನು ತ್ಯಾಗ ಮಾಡಿ, ಬ್ರಿಟಿಷರ ಬಂದೂಕಿಗೆ ಎದೆಯನ್ನು ಕೊಟ್ಟು, ಜೈಲುವಾಸ ಮಾಡಿ ಹೋರಾಟ ಮಾಡಿ ದಕ್ಕಿಸಿಕೊಂಡದ್ದು ಭಾರತ ಸ್ವಾತಂತ್ರ್ಯ. ಬ್ರಿಟಿಷರಿಗೆ ಕ್ಷಮಾಪಣಾ ಪತ್ರವನ್ನು ಬರೆದುಕೊಟ್ಟ ಸಾವರ್ಕರ್ ಅವರನ್ನು ಪೂಜಿಸುವ, ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಗೌರವಿಸುವ ಬಿಜೆಪಿ ಈಗ ಅಮೃತ ಮಹೋತ್ಸವ ಆಚರಿಸುತ್ತಿರುವುದು ನಮ್ಮ ದುರಾದೃಷ್ಟ. ಧರ್ಮ, ಜಾತಿಯ ನಡುವೆ ದ್ವೇಷ ಮನೋಭಾವ ಬಿತ್ತಿ ರಾಜಕೀಯ ಲಾಭವನ್ನು ಪಡೆಯುತ್ತಿರುವ ಬಿಜೆಪಿ, ದೇಶವನ್ನು ಮತ್ತೆ ಅವನತಿಯತ್ತ ಕೊಂಡೊಯ್ಯುತ್ತಿದೆ’ ಎಂದರು.
ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ದೇಶ ಸ್ವಾತಂತ್ರ್ಯ ಪಡೆದು ಅಮೃತ ಮಹೋತ್ಸವವನ್ನು ಆಚರಿಸುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.
ಕಾಂಗ್ರೆಸ್ ಉಡುಪಿ ಜಿಲ್ಲಾ ಉಸ್ತುವಾರಿ ಅಭಯಚಂದ್ರ ಜೈನ್, ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.
ಕಾಂಗ್ರೆಸ್ ಮುಖಂಡರಾದ ಎಂ.ಎ. ಗಫೂರ್, ಎಸ್. ರಾಜು ಪೂಜಾರಿ, ವಾಸುದೇವ ಯಡಿಯಾಳ್, ರಘುರಾಮ ಪೂಜಾರಿ, ವಿಜಯ ಶೆಟ್ಟಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ನಾಗರಾಜ ಗಾಣಿಗ ಬಂಕೇಶ್ವರ, ಗೌರಿ ದೇವಾಡಿಗ, ದೀಪಕ್ ಕೋಟ್ಯಾನ್, ಶೇಖರ ಪೂಜಾರಿ, ಮಣಿಕಂಠ ದೇವಾಡಿಗ, ತಬ್ರೇಜ್ ನಾಗೂರು, ಶಾಂತಿ ಪಿರೇರಾ, ಜಗದೀಶ್ ಇದ್ದರು.
ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ ಕುಮಾರ್ ಉಪ್ಪುಂದ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜಗದೀಶ ದೇವಾಡಿಗ ವಂದಿಸಿದರು. ಕಂಬದಕೋಣೆಯಿಂದ ಬೈಂದೂರು ತನಕ ಕಾಲ್ನಡಿಗೆ ಜಾಥಾ ನಡೆಯಿತು.