ಕಾರ್ಕಳ: ‘ದೇಶದಲ್ಲಿ ಪ್ರಜಾಪ್ರಭುತ್ವದ ಅಡಿಪಾಯ ಭದ್ರವಾಗಿದ್ದು 75 ವರ್ಷಗಳಾದರೂ ಅದನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಾಗಿಲ್ಲ’ ಎಂದು ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಎಂ.ಎ ಗಫೂರ್ ಹೇಳಿದರು.
ಕಾರ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾಲ್ನಡಿಗೆ ಜಾಥಾದ ಸಮಾರೋಪದಲ್ಲಿ ಅವರು ಮಾತನಾಡಿದರು.
‘ದೇಶದ ಅಖಂಡತೆ, ಏಕತೆ ಹಾಗೂ ಜಾತ್ಯಾತೀತ ವ್ಯವಸ್ಥೆ ಮುಂದೆಯೂ ಭದ್ರವಾಗಿರಬೇಕು. ಸಾಮಾಜಿಕ ನ್ಯಾಯದ ಕಲ್ಪನೆಯಲ್ಲಿ ರಾಜ್ಯದಲ್ಲಿ ಸಿಇಟಿ ಪರೀಕ್ಷಾ ಪದ್ಧತಿಯ ಮೂಲಕ ಎಂಜಿನಿಯರಿಂಗ್, ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ಅವಕಾಶ, ಬಡವರಿಗೆ ಭೂಮಿ, ಯುವಕರಿಗೆ ಉದ್ಯೋಗ ಸೇರಿದಂತೆ ಹಲವು ಪ್ರಗತಿಪರ ಕಾರ್ಯಗಳನ್ನು ಕಾಂಗ್ರೆಸ್ ಮಾಡಿದೆ. ಕಾರ್ಕಳದಲ್ಲೂ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಸೇರಿದಂತೆ ಹಲವು ನಾಯಕರು ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇವರೆಲ್ಲರ ಕೊಡುಗೆ ಅಪಾರವಾದುದು. ಹೀಗಾಗಿ ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ’ ಎಂದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಮಂಜುನಾಥ ಪೂಜಾರಿ ಮಾತನಾಡಿ, ‘ಜನರ ನಡುವೆ ವೈಷಮ್ಯ ಹುಟ್ಟುಹಾಕುತ್ತಿರುವ ಬಿಜೆಪಿಯು, ಪರಿಶಿಷ್ಟರು ದೇವಸ್ಥಾನ ಪ್ರವೇಶಿಸದಂತೆ ಬಹಿಷ್ಕಾರ ಹಾಕುತ್ತಾರೆ. ಮುಸ್ಲಿಮರನ್ನು ಪಾಕಿಸ್ತಾನಕ್ಕೆ ಓಡಿಸುತ್ತೇವೆ ಎನ್ನುತ್ತಾರೆ, ಇವರು ರಾಷ್ಟ್ರ ಧ್ವಜವನ್ನು ಮಾರಾಟಕ್ಕೆ ಇಟ್ಟಿದ್ದಾರೆ’ ಎಂದು ಆರೋಪಿಸಿದರು.
ಪಕ್ಷದ ನಾಯಕ ಶೇಖರ ಮಡಿವಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು.
ಪಕ್ಷದ ನಾಯಕ ನೀರೆ ಕೃಷ್ಣ ಶೆಟ್ಟಿ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಮಧುರಾಜ್ ಶೆಟ್ಟಿ, ಕಾಂಗ್ರೆಸ್ ಯುವ ನಾಯಕ ಸುರೇಂದ್ರ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ಕೋಟ್ಯಾನ್, ಸುಧಾಕರ ಕೋಟ್ಯಾನ್, ಅನಿತಾ ಡಿಸೋಜಾ, ಕಾಂತಿ ಶೆಟ್ಟಿ, ಪ್ರಭಾಕರ ಬಂಗೇರ ಇದ್ದರು.
ಪಕ್ಷದ ನಗರ ವಕ್ತಾರ ಶುಭದ್ ರಾವ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಿರೂಪಿಸಿದರು.