ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಸೆ.1ರಿಂದ ಶಾಲೆಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.
ಕಳೆದ ಮೂರು ದಿನಗಳ ಅಂಕಿ ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ 1.4ರಷ್ಟಿದೆ. ಹಾಗಾಗಿ, 9 ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲು ಜಿಲ್ಲಾಡಳಿತ ನಿರ್ಣಯ ತೆಗೆದುಕೊಂಡಿದೆ. ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯಬೇಕು. ಒಂದೂ ಲಸಿಕೆ ಪಡೆಯದ ಶಿಕ್ಷಕರು ಲಸಿಕೆ ಹಾಕಿಸಿಕೊಳ್ಳುವವರೆಗೂ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ ಎಂದರು.
ರಾಜ್ಯದಲ್ಲಿ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಬೇಕು ಎಂಬುದು ಎಲ್ಲರ ಆಶಯ. ಆದರೆ, ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಕೇಂದ್ರ ಸರ್ಕಾರದ ಕೋವಿಡ್ ಮಾರ್ಗಸೂಚಿಗಳಂತೆ ಗಣೇಶ ಹಬ್ಬ ಆಚರಿಸಬೇಕಿದೆ. ಸರ್ಕಾರದ ನಿರ್ಧಾರಕ್ಕೆ ಜನರು ಸಹಕಾರ ನೀಡಬೇಕು ಎಂದರು.