ಉಡುಪಿ: ನ.12ರಂದು ಉಡುಪಿ ಜಿಲ್ಲೆಯ ಜನರು ಬೆಚ್ಚಿ ಬೀಳುವಂತಹ ಘಟನೆ ನಡೆಯಿತು. ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್ನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಹಾಡಹಗಲೇ ನಡೆದ ಭೀಕರ ಕೊಲೆ ಉಡುಪಿ ನಗರ ನಿಜವಾಗಿಯೂ ಸುರಕ್ಷಿತವೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಉಡುಪಿ ನಗರಕ್ಕೆ ಸಮರ್ಥ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದಿರುವುದು ನಾಗರಿಕರ ಆತಂಕಕ್ಕೆ ಕಾರಣವಾಗಿದೆ.
ಉಡುಪಿ ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ರಾಜ್ಯಕ್ಕೆ ಮಾದರಿಯಾಗಿ ಬೆಳೆದಿರುವ ಜಿಲ್ಲೆ. ಉಡುಪಿ ಧಾರ್ಮಿಕವಾಗಿ ಶ್ರೀಮಂತವಾಗಿದ್ದರೆ, ಉಡುಪಿಗೆ ಹೊಂದಿಕೊಂಡಿರುವ ಮಣಿಪಾಲ ನಗರ ಆರೋಗ್ಯ, ಶಿಕ್ಷಣ ಹಾಗೂ ಬ್ಯಾಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ.
ಉಡುಪಿಯ ಕೃಷ್ಣಮಠ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ನೂರಾರು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು, ಸುಂದರ ಕಡಲ ಕಿನಾರೆಗಳು, ಕಣ್ಮನ ಸೆಳೆಯುವ ನದಿ ಸಮುದ್ರ ಸೇರುವ ಹಿನ್ನೀರಿನ ತಾಣಗಳು, ಪಶ್ಚಿಮ ಘಟ್ಟ ಹಾಗೂ ಕರಾವಳಿಯ ರಮಣೀಯ ಸ್ಥಳಗಳನ್ನು ಒಡಲಲ್ಲಿಟ್ಟುಕೊಂಡಿದೆ ಉಡುಪಿ.
ಪ್ರತಿದಿನ ಸಾವಿರಾರು ಪ್ರವಾಸಿಗರನ್ನು ಸೆಳೆಯುತ್ತಿರುವ, ರಾಜ್ಯದಲ್ಲೇ ಅತಿ ವೇಗವಾಗಿ ಬೆಳೆಯುತ್ತಿರುವ ಉಡುಪಿ ಜಿಲ್ಲೆಗೆ ಅಗತ್ಯವಾಗಿ ಬೇಕಿರುವ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆ ಸಮರ್ಪಕವಾಗಿ ಇಲ್ಲ. ಅತಿ ಹೆಚ್ಚು ಜನದಟ್ಟಣೆ ಇರುವ ಉಡುಪಿ ನಗರದ ಆಯಕಟ್ಟಿನ ಜಾಗಗಳಲ್ಲಿ, ಪ್ರವಾಸಿ ತಾಣಗಳಲ್ಲಿ, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿಲ್ಲ.
ಅಪರಾಧ ಕೃತ್ಯಗಳನ್ನು ತಡೆಯುವಲ್ಲಿ ಹಾಗೂ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ಪ್ರಮುಖ ಪಾತ್ರ ವಹಿಸುವ ಸಿಸಿಟಿವಿ ಕ್ಯಾಮೆರಾಗಳು ಉಡುಪಿಯಲ್ಲಿ ಸಮರ್ಪಕವಾಗಿ ಅಳವಡಿಸದ ಪರಿಣಾಮ ಪರೋಕ್ಷವಾಗಿ ಅಪರಾಧ ಕೃತ್ಯಗಳ ಹೆಚ್ಚಳಕ್ಕೆ ಕಾರಣವಾಗಿದೆ.
ನಗರದ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇಲ್ಲದಿರುವುದರಿಂದ ಕಳವು, ಸುಲಿಗೆ, ಕೊಲೆ, ದರೋಡೆಯಂತಹ ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಹರಸಾಹಸಪಡಬೇಕಾದ ಪರಿಸ್ಥಿತಿ ಎದುರಾಗಿದೆ. ಮೋಸ್ಟ್ ವಾಟೆಂಡ್ ಕ್ರಿಮಿನಲ್ಗಳ ಮೇಲೆ ಹದ್ದಿನ ಕಣ್ಣಿಡಲೂ ಸಾಧ್ಯವಾಗುತ್ತಿಲ್ಲ.
ಸಣ್ಣ ಪುಟ್ಟ ಪ್ರಕರಣಗಳನ್ನು ಪತ್ತೆಹಚ್ಚಲೂ ಪೊಲೀಸರು ನಗರದ ಖಾಸಗಿ ವಾಣಿಜ್ಯ ಮಳಿಗೆಗಳು, ಮನೆಗಳ ಮಾಲೀಕರು, ವಿದ್ಯಾಸಂಸ್ಥೆಗಳು, ಬ್ಯಾಂಕ್ ಕಚೇರಿಗಳನ್ನು ಸಂಪರ್ಕಿಸುವ ಅನಿವಾರ್ಯತೆಗೆ ಸಿಲುಕಿದ್ದಾರೆ. ಬಹುತೇಕ ಸಂದರ್ಭಗಳಲ್ಲಿ ಸಿಸಿಟಿವಿ ಕ್ಯಾಮೆರಾ ಸಾಕ್ಷ್ಯಗಳು ಲಭ್ಯವಾಗದೆ ಆರೋಪಿಗಳ ಪತ್ತೆ ವಿಳಂಬವಾಗುತ್ತಿದೆ ಎನ್ನುತ್ತಾರೆ ಹೆಸರು ಹೇಳಲಿಚ್ಚಿಸದ ಅಧಿಕಾರಿ.
ಕೆಲವೊಮ್ಮೆ ಖಾಸಗಿ ಸಂಸ್ಥೆಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಕಳಪೆ ಗುಣಮಟ್ಟದಿಂದ ಕೂಡಿದ್ದು, ಆರೋಪಿಯ ಗುರುತು ಪತ್ತೆಹಚ್ಚುವುದೇ ಪೊಲೀಸ್ ಇಲಾಖೆಗೆ ಸವಾಲಾಗಿ ಪರಿಣಮಿಸುತ್ತಿದೆ.
ಉಡುಪಿ ನಗರದ ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿಲ್ಲ ಎಂದಲ್ಲ. ಹಲವು ವರ್ಷಗಳ ಹಿಂದೆ ಮಣಿಪಾಲದ ಟೈಗರ್ ಸರ್ಕಲ್, ಸಿಂಡಿಕೇಟ್ ಸರ್ಕಲ್, ಉಡುಪಿಯ ಸಿಟಿ ಬಸ್ ನಿಲ್ದಾಣ, ಕಲ್ಸಂಕ ವೃತ್ತ, ಕರಾವಳಿ ಬೈಪಾಸ್, ತ್ರಿವೇಣಿ ಸರ್ಕಲ್, ಸಂತೆಕಟ್ಟೆ ಜಂಕ್ಷನ್, ಮಲ್ಪೆ ಬಸ್ನಿಲ್ದಾಣ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು.
ನಿರ್ವಹಣೆ ಕೊರತೆಯಿಂದ ಇವುಗಳಲ್ಲಿ ಬಹುತೇಕ ಕ್ಯಾಮೆರಾಗಳು ಸದ್ಯ ಕಾರ್ಯ ನಿರ್ವಹಿಸುತ್ತಿಲ್ಲ. ನಗರದ ಅಲ್ಲಲ್ಲಿ ಇಂದಿಗೂ ಕೆಟ್ಟುನಿಂತ ಸಿಸಿಟಿವಿ ಕ್ಯಾಮೆರಾಗಳ ಅವಶೇಷಗಳನ್ನು ಕಾಣಬಹುದು. ಹೊಲಗಳಲ್ಲಿ ಬೆಳೆ ರಕ್ಷಣೆಗೆ ಹಾಕಿರುವ ಬೆಚ್ಚಪ್ಪನಂತೆ ನಿಂತಿರುವ ಸಿಸಿಟಿವಿ ಕ್ಯಾಮೆರಾಗಳಿಂದ ಯಾವುದೇ ಪ್ರಯೋಜನವಿಲ್ಲ ಎನ್ನುತ್ತಾರೆ ಸಾರ್ವಜನಿಕರು.
ಸಿಸಿಟಿವಿ ಕಣ್ಗಾವಲು ಯಾಕೆ ಬೇಕು: ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ, ಪ್ರವಾಸಿ ತಾಣಗಳಿಗೆ ಯಾರೆಲ್ಲ ಭೇಟಿ ನೀಡುತ್ತಾರೆ ಎಂದು ಕಣ್ಗಾವಲು ಇರಿಸಲು ಗುಣಮಟ್ಟದ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಅತ್ಯಂತ ತುರ್ತಾಗಿ ಆಗಬೇಕಿದೆ. ಆಯಕಟ್ಟಿನ ಜಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇದ್ದರು ಕ್ರಿಮಿನಲ್ಗಳ ಮೇಲೆ ಸುಲಭವಾಗಿ ನಿಗಾ ವಹಿಸಬಹುದು. ಅಪರಾಧ ಕೃತ್ಯಗಳು ನಡೆದಾಗ ಆರೋಪಿಯನ್ನು ಸುಲಭವಾಗಿ ಪತ್ತೆ ಹಚ್ಚಬಹುದು. ಜತೆಗೆ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲೂ ಸಾಧ್ಯವಿದೆ ಎನ್ನುತ್ತಾರೆ ನಾಗರಿಕರು.
ಸಿಸಿಟಿವಿ ಅಳವಡಿಕೆಯಿಂದ ಸಂಚಾರ ವ್ಯವಸ್ಥೆಯನ್ನು ಬಲಗೊಳಿಸಬಹುದು. ಸಂಚಾರ ನಿಯಮ ಉಲ್ಲಂಘಿಸುವವರನ್ನು ಪತ್ತೆಹಚ್ಚಿ ದಂಡ ವಿಧಿಸಬಹುದು. ಹಿಟ್ ಆ್ಯಂಡ್ ರನ್ ಪ್ರಕರಣಗಳ ತನಿಖೆಗೂ ಸಹಕಾರಿಯಾಗಲಿದೆ.
ಉಡುಪಿ ನಗರಕ್ಕೆ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸುವ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗುವುದು.ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾ ಉಸ್ತುವಾರಿ ಸಚಿವೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.