ಉಡುಪಿ: ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳಿಗೆ ಹಳ್ಳಿಯ ಜನರು ನಗರ ಪ್ರದೇಶಕ್ಕೆ ಅಲೆಯುವ ಅಗತ್ಯವಿಲ್ಲ. ಸರ್ಕಾರಿ ಸೇವೆಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕವೇ ಪಡೆಯಬಹುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಎಸ್.ಅಂಗಾರ ಹೇಳಿದರು.
ಉದ್ಯಾವರ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಒನ್ ಕೇಂದ್ರವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳೊಂದಿಗೆ ನಡೆದ ವರ್ಚುವಲ್ ಕಾರ್ಯಕ್ರಮದ ನಂತರ ಮಾತನಾಡಿದರು.
ಗ್ರಾಮೀಣ ಜನರು ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅಗತ್ಯವಿರುವ ದಾಖಲೆ ಪಡೆಯಲು ದೂರದ ಊರುಗಳಿಂದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೆ ಬಂದು ಸರದಿಯಲ್ಲಿ ನಿಂತು ದಾಖಲೆಗಳನ್ನು ಪಡೆಯಬೇಕಿತ್ತು. ಜನರಿಗೆ ಆಗುತ್ತಿರುವ ಕಷ್ಟವನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಗ್ರಾಮ ಒನ್ ಕೇಂದ್ರಗಳನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಆರಂಭಿಸುತ್ತಿದ್ದು, ಅದರಂತೆ, ಉಡುಪಿ ಜಿಲ್ಲೆಯಲ್ಲಿ 105 ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಗ್ರಾಮ ಒನ್ ಕೇಂದ್ರಗಳಲ್ಲಿ ಸರ್ಕಾರದ 48 ಇಲಾಖೆಗಳ 750ಕ್ಕೂ ಹೆಚ್ಚಿನ ಸೇವೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಸೇವೆ, ಇ ಸ್ಟಾಂಪಿಂಗ್, ಬ್ಯಾಂಕಿಂಗ್ ಸೇವೆ, ಸಕಾಲ, ಮಾಹಿತಿ ಹಕ್ಕು ಅಧಿನಿಯಮ ಹಾಗೂ ಇನ್ನಿತರ ಸೇವಾ ಸೌಲಭ್ಯಗಳು ದೊರೆಯಲಿವೆ. ಮುಂದಿನ ದಿನಗಳಲ್ಲಿ ಆಧಾರ್ ಕೇಂದ್ರದ ಸೇವೆಗಳು ದೊರೆಯಲಿದ್ದು ಸಾರ್ವಜನಿಕರು ಈ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳುವಂತೆ ಸಚಿವರು ಹೇಳಿದರು.
ವರ್ಚುವಲ್ ಸಭೆಯ ಮೂಲಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ಗ್ರಾಮೀಣ ಜನರು ಗ್ರಾಮ ಒನ್ ಕೇಂದ್ರಗಳಲ್ಲಿ ಮಧ್ಯವರ್ತಿಗಳ ನೆರವಿಲ್ಲದೆ ಅತ್ಯಂತ ಸುಲಭವಾಗಿ ಅಗತ್ಯ ದಾಖಲೆಗಳನ್ನು ಕಡಿಮೆ ಖರ್ಚಿನಲ್ಲಿ ತ್ವರಿತವಾಗಿ ಪಡೆಯಬಹುದು. ಈಗಾಗಲೇ ಪ್ರಾಯೋಗಿಕವಾಗಿ ಯೋಜನೆಯನ್ನು ಜಾರಿಗೊಳಿಸಿದ್ದ 4 ಜಿಲ್ಲೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದೆ ಎಂದರು.
ಇಂದಿನಿಂದ ರಾಜ್ಯದ 12 ಜಿಲ್ಲೆಗಳ 3000ಕ್ಕೂ ಹೆಚ್ಚು ಗ್ರಾಮಗಳಲ್ಲಿ ಕೇಂದ್ರಗಳು ಆರಂಭಗೊಳ್ಳಲಿವೆ. ಎಲ್ಲ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಈ ಕೇಂದ್ರಗಳ ಸಮರ್ಪಕ ಕಾರ್ಯನಿರ್ವಹಣೆಗೆ ಕ್ರಮಗಳನ್ನು ಕೈಗೊಳ್ಳಬೇಕು. ಸಚಿವರು ಪ್ರವಾಸದ ಸಂದರ್ಭ ಕೇಂದ್ರಗಳಿಗೆ ಭೇಟಿನೀಡಿ ಕಾರ್ಯವೈಖರಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಮುಖ್ಯಮಂತ್ರಿಗಳ ಸೂಚನೆಯಂತೆ ರಾಜ್ಯದಲ್ಲಿ ಪ್ರಥಮವಾಗಿ ಉಡುಪಿಯ ಉದ್ಯಾವರ ಗ್ರಾಮ ಪಂಚಾಯತ್ನ ಗ್ರಾಮ ಒನ್ ಕೇಂದ್ರದಲ್ಲಿ ಆರ್ಟಿಸಿ ಪತ್ರವನ್ನು ಗ್ರಾಮಸ್ಥರಿಗೆ ಸಚಿವ ಅಂಗಾರ ವಿತರಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಲಾಲಾಜಿ ಆರ್.ಮೆಂಡನ್, ಉದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಜಿಲ್ಲಾಧಿಕಾರಿ ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.