ಉಡುಪಿ: ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂಬೈನಿಂದ ರಾಜ್ಯಕ್ಕೆ ಬಂದವರಲ್ಲಿ ಕೋವಿಡ್ ಸೋಂಕು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿನ್ನೆಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಬದಲು 14 ದಿನಗಳ ಕಟ್ಟುನಿಟ್ಟಿನ ಹೋಂ ಕ್ವಾರಂಟೈನ್ಗೆ ಸರ್ಕಾರ ನಿರ್ಧರಿಸಿದೆ ಎಂದರು.
ಹೋಂ ಕ್ವಾರಂಟೈನ್ಗೆ ಒಳಗಾದವರ ಮನೆಗಳನ್ನು ಸೀಲ್ ಮಾಡಿ, ಅಕ್ಕಪಕ್ಕದ ಮನೆಗಳಿಗೆ ತಿಳಿವಳಿಕೆ ನೋಟಿಸ್ ನೀಡಲಾಗುವುದು. ಹೋಂ ಕ್ವಾರಂಟೈನ್ ಮೇಲೆ ನಿಗಾ ಇರಿಸಲು ಅಧಿಕಾರಿಗಳ ಸಮಿತಿ ನೇಮಕ ಮಾಡಲಾಗಿದೆ ಎಂದರು.
ಕೋವಿಡ್ ಬಳಿಕ ಮೇಲ್ದರ್ಜೆಗೆ:ಜಿಲ್ಲಾ ಆಸ್ಪತ್ರೆಯನ್ನು 250 ಬೆಡ್ಗಳಿಗೆ ಮೇಲ್ದರ್ಜೆಗೇರಿಸುವ ವಿಚಾರ ಸಭೆಯಲ್ಲಿ ಚರ್ಚೆಯಾಗಿದ್ದು, ಕೋವಿಡ್ ಸೋಂಕು ಇಳಿಮುಖವಾದ ಕೂಡಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಆರೋಗ್ಯ ಇಲಾಖೆಯ ಹೊರಗುತ್ತಿಗೆ ಹಾಗೂ ಗುತ್ತಿಗೆ ನೌಕರರ ಬೇಡಿಕೆಗಳ ಈಡೇರಿಕೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ ಬಳಿಕ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿದರು.
ಪ್ರತ್ಯೇಕ ಸಭೆ:ಬಿಆರ್ಎಸ್ ಸಂಸ್ಥೆ 6 ತಜ್ಞ ವೈದ್ಯರನ್ನು ನೀಡುವಂತೆ ಸರ್ಕಾರಕ್ಕೆ ಮನವಿ ನೀಡಿತ್ತು. ಅದರಂತೆ ತಜ್ಞ ವೈದ್ಯರನ್ನು ನೀಡಲಾಗಿದೆ. ಇತರೆ ಬೇಡಿಕೆಗಳ ಈಡೇರಿಕೆ ಸಂಬಂಧ ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದರು.