ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್‌ ವಿವಾದ: ವಿಜ್ಞಾನ ಪ್ರಾಯೋಗಿಕ ಪರೀಕ್ಷೆ ಮುಂದೂಡಲು ವಿದ್ಯಾರ್ಥಿನಿಯರ ಆಗ್ರಹ

ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರ ಒತ್ತಾಯ
Last Updated 23 ಫೆಬ್ರುವರಿ 2022, 14:02 IST
ಅಕ್ಷರ ಗಾತ್ರ

ಉಡುಪಿ: ಹೈಕೋರ್ಟ್‌ನಲ್ಲಿ ಹಿಜಾಬ್ ಪ್ರಕರಣದ ವಿಚಾರಣೆ ನಡೆಯುತ್ತಿದ್ದು ಅಂತಿಮ ಆದೇಶ ಬರುವವರೆಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಹಿಜಾಬ್‌ಗಾಗಿ ಹೋರಾಟ ನಡೆಸುತ್ತಿರುವ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಲಿಯಾ ಅಸಾದಿ ಒತ್ತಾಯಿಸಿದರು.

ಬುಧವಾರ ಸಹಪಾಠಿಗಳ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ಪ್ರಾಯೋಗಿಕ ಪರೀಕ್ಷೆಯನ್ನು ಆನ್‌ಲೈನ್‌ನಲ್ಲಿ ಬರೆಯಲು ಸಾಧ್ಯವಿಲ್ಲದ್ದರಿಂದ ಅಂತಿಮ ಆದೇಶದವರೆಗೂ ಮುಂದೂಡಬೇಕು. ಈ ಸಂಬಂಧ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು.

‘ಹಿಜಾಬ್ ಕಾರಣದಿಂದ ರಾಜ್ಯದಾದ್ಯಂತ ಮುಸ್ಲಿಂ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ.ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇದ್ದು, ನಮ್ಮ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಶೀಘ್ರ ಅಂತಿಮ ಆದೇಶ ಬರಬೇಕು’ ಎಂದು ಆಲಿಯಾ ಆಗ್ರಹಿಸಿದರು.

ಜಾಲತಾಣಗಳಲ್ಲಿ ನಿಂದನೆ:

‘ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಮಾಹಿತಿ ಸೋರಿಕೆಯಾದ ಬಳಿಕ ಅಪರಿಚಿತರಿಂದ ಹೆಚ್ಚಾಗಿ ಕರೆಗಳು ಬರುತ್ತಿದ್ದು, ಅವಾಚ್ಯವಾಗಿ ನಿಂದಿಸಲಾಗುತ್ತಿದೆ. ಮಾಧ್ಯಮಗಳಿಂದಲೂ ಖಾಸಗಿತನಕ್ಕೆ ಧಕ್ಕೆಯಾಗಿದೆ. ಕೆಲವರು ವಿಡಿಯೋಗಳನ್ನು ವೈರಲ್‌ ಮಾಡಿ ವಿಕೃತಿ ಪ್ರದರ್ಶಿಸುತ್ತಿದ್ದಾರೆ’ ಎಂದು ಆಲ್ಮಾ ಅಸಮಾಧಾನ ವ್ಯಕ್ತಪಡಿಸಿದರು.

ಸಹಪಾಠಿ ಹಾಜ್ರಾ ಶಿಫಾಳ ಪೋಷಕರ ಹೋಟೆಲ್ ಮೇಲೆ ದಾಳಿ ನಡೆಸಿ, ಅಣ್ಣನ ಮೇಲೆ ಹಲ್ಲೆ ನಡೆಸಲಾಗಿದೆ. ಘಟನೆಯಿಂದ ಶಿಫಾ ಮಾನಸಿಕವಾಗಿ ಜರ್ಜರಿತಗೊಂಡಿದ್ದು ಮನೆಯಿಂದ ಹೊರಬರುತ್ತಿಲ್ಲ. ಹಲ್ಲೆ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಿಜಾಬ್‌ ಹೋರಾಟದಲ್ಲಿ ಅನವಶ್ಯಕವಾಗಿ ಕುಟುಂಬವನ್ನು ಎಳೆದು ತರಬಾರದು, ಮಾಧ್ಯಮಗಳು ಖಾಸಗಿತನವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.

ಸುಪ್ರೀಂಕೋರ್ಟ್‌ ಮೊರೆ:

ಹೈಕೋರ್ಟ್‌ನಲ್ಲಿ ಹಿಜಾಬ್ ಪರವಾಗಿ ತೀರ್ಪು ಬರುವ ವಿಶ್ವಾಸವಿದೆ. ಬರದಿದ್ದರೆ ಸುಪ್ರಿಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಹಿಜಾಬ್‌ಗಾಗಿ ಮುಸ್ಲಿಂ ಹೆಣ್ಣುಮಕ್ಕಳು ಕಾಲೇಜಿನ ಗೇಟ್‌ ಹೊರಗೆ ಕೂರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ವಿವಾದ ಶೀಘ್ರ ಬಗೆಹರಿಯಬೇಕು ಎಂದು ವಿದ್ಯಾರ್ಥಿನಿ ರೇಶಮ್‌ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT