ಕಾಪು (ಉಡುಪಿ): ತಾಲ್ಲೂಕಿನ ಮಲ್ಲಾರಿನ ಮೌಲಾನಾ ಆಜಾದ್ ಪ್ರೌಢಶಾಲೆಯಲ್ಲಿ ಸೋಮವಾರ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಶಾಲೆಯ ಮುಖ್ಯೋಪಾಧ್ಯಾಯರ ಕ್ರಮ ಖಂಡಿಸಿ ಮಂಗಳವಾರ ಪೋಷಕರು ಶಾಲೆ ಎದುರು ಪ್ರತಿಭಟನೆ ನಡೆಸಿದರು.
ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡ ಪೋಷಕರು ಮಕ್ಕಳಿಗೆ ತರಗತಿಯಲ್ಲಿ ಹಿಜಾಬ್ ಧರಿಸಲು ಅನುಮತಿ ನೀಡಬೇಕು. ನಿರಾಕರಿಸಿದರೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದರು.
ಸೋಮವಾರ ಹಿಜಾಬ್ ಧರಿಸಿ ಬಂದಿದ್ದ 20 ವಿದ್ಯಾರ್ಥಿನಿಯರು ಮಂಗಳವಾರ ಗೈರಾಗಿದ್ದಾರೆ.
ಮತ್ತೊಂದೆಡೆ, ಇದೇ ಶಾಲಾ ಆವರಣದಲ್ಲಿರುವ ಉರ್ದು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಶಿಕ್ಷಕರು ಅನುಮತಿ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಶಾಲೆಗೆ ಭೇಟಿನೀಡಿ ಪರಿಶೀಲನೆ ನಡೆಸಿದರು.