ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕರಾವಳಿ ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್’

Last Updated 6 ಜುಲೈ 2021, 3:16 IST
ಅಕ್ಷರ ಗಾತ್ರ

ಪಡುಬಿದ್ರಿ: ಕರಾವಳಿ ಮೂರು ಜಿಲ್ಲೆಗಳಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆ ಕುರಿತಂತೆ ರಚಿಸಿರುವ ಕಾರ್ಯಪಡೆಯಿಂದ ಸಮಗ್ರ ವರದಿ ಸಿದ್ಧಪಡಿಸಲು ಸೂಚಿಸಲಾಗಿದ್ದು,ಅದನ್ನು ಆಧರಿಸಿ ಈ ಭಾಗದಲ್ಲಿ ಕೈಗಾರಿಕಾ ಬೆಳವಣಿಗೆ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಸಚಿವ ಜಗದೀಶ ಶೆಟ್ಟಿರ್ ಹೇಳಿದರು.

ನಂದಿಕೂರು ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಕೈಗಾರಿಕೋದ್ಯಮಿಗಳ ಜತೆ ಅವರು ಸಂವಾದ ನಡೆಸಿದರು. ಬೆಂಗಳೂರು ಬಿಟ್ಟು ಹೊರ ಜಿಲ್ಲೆಗಳಲ್ಲಿ ಕೈಗಾರಿಕೆ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ಎರಡು ವರ್ಷಗಳಲ್ಲಿಮಂಗಳೂರು, ಯಾದಗಿರಿ‌,ಕೊಪ್ಪಳ,ಬೆಳಗಾವಿ ಮೊದಲಾದ ಕಡೆಗಳಲ್ಲಿ ಹೊಸದಾಗಿ ಬೃಹತ್ ಕೈಗಾರಿಕೆಗಳು ಆರಂಭಗೊಳ್ಳುತ್ತಿವೆ ಎಂದರು.

ಹೊಸ ಕೈಗಾರಿಕೆ ಉತ್ತೇಜಿಸುವ ಸಲುವಾಗಿ ಸರ್ಕಾರ 24X7ಮಾದರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ. ನೂತನ ಕೈಗಾರಿಕಾ ನೀತಿಯಂತೆ ಕೈಗಾರಿಕೆಗಳನ್ನು ನಿರ್ಮಿಸಲು ಅಗತ್ಯ ಇರುವ ಪರವಾನಗಿಯನ್ನು ಸುಲಲಿತವಾಗಿ ದೊರಕಿಸಿಕೊಡಲು ವ್ಯವಸ್ಥೆ ಮಾಡಲಾಗುವುದು. ಏಕಗವಾಕ್ಷಿ ಪದ್ಧತಿಯಲ್ಲಿ ಎಲ್ಲ ರೀತಿಯ ವ್ಯವಸ್ಥೆಗಳನ್ನು ದೊರಕಿಸುವಂತಹ ಪ್ರಯತ್ನಗಳು ನಡೆಯುತ್ತಿವೆ ಎಂದು ವಿವರಿಸಿದರು.

ತೆರಿಗೆ ಬಗ್ಗೆ ಸಭೆಯಲ್ಲಿ ತೀರ್ಮಾನ: ಕೈಗಾರಿಕಾ ಘಟಕಗಳಿಂದ ಗ್ರಾಮ ಪಂಚಾಯಿತಿಗಳಿಗೆ ಬಾಕಿಯಿರುವ ತೆರಿಗೆ ಪಾವತಿ ಬಗ್ಗೆ ಶೀಘ್ರದಲ್ಲಿ ಕೈಗಾರಿಕಾ,ನಗರಾಭಿವೃದ್ಧಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯೊಂದಿಗೆ ಜಂಟಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಕೈಗಾರಿಕೆಗಳಿಗೆ ನೀಡಿರುವ ಭೂಮಿಗಳ ದರದಲ್ಲಿನ ಹೆಚ್ಚಳ ಕುರಿತಂತೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ಸ್ಥಳೀಯರಿಗೆ ಉದ್ಯೋಗ: ಸ್ಥಳೀಯವಾಗಿ ಸ್ಥಾಪನೆಗೊಳ್ಳುವ ಬೃಹತ್ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಒದಗಿಸಿಕೊಡಲು ಸರ್ಕಾರ ಬದ್ಧವಾಗಿದೆ. ಉದ್ದಿಮೆಗೆ ಪರವಾನಿಗೆ ನೀಡುವಾಗ ಸಂಬಂಧಪಟ್ಟ ಉದ್ದಿಮೆದಾರರಿಗೆ ಉದ್ಯೋಗದಲ್ಲಿ 1 ಮತ್ತು 2ನೇ ದರ್ಜೆಯ ಶೇ 80ರಷ್ಟು, 3 ಮತ್ತು 4ನೇ ದರ್ಜೆಯಲ್ಲಿಶೇ 100ರಷ್ಟು ಸ್ಥಳೀಯರಿಗೆ ನೀಡಲು ಒಪ್ಪಂದದಲ್ಲೇ ಸೂಚನೆ ನೀಡಲಾಗುತ್ತಿದೆ. ಅದಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಕೈಗಾರಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಪಡುಬಿದ್ರಿ ವ್ಯಾಪ್ತಿಯ ಸುಜ್ಲಾನ್ ಹಾಗೂ ಎಲ್ಲೂರು ವ್ಯಾಪ್ತಿಯ ಯುಪಿಸಿಎಲ್ ಯೋಜನೆಗಳಿಂದ ಆಗಿರುವ ಸಮಸ್ಯೆಗಳ ಬಗ್ಗೆ ಹಾಗೂ ಕೈಗಾರಿಕೆಗಳ ತೆರಿಗೆ ಪಾವತಿ ಕುರಿತಂತೆ ಶೀಘ್ರ ಸಮಗ್ರ ವರದಿ ಸಲ್ಲಿಸುವಂತೆ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು. ವರದಿ ಆಧರಿಸಿ ಅವರಿಗೆ ಎಚ್ಚರಿಕೆ ನೀಡುವ ಇಲ್ಲವೇ ಸೂಕ್ತ ಕಾನೂನು ಕ್ರಮಕೈಗೊಳ್ಳುವ ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಮನವಿ: ಯುಪಿಸಿಎಲ್ ಕಂಪನಿಯು ಎಲ್ಲೂರು ಗ್ರಾಮ ಪಂಚಾಯಿತಿಗೆ ನೀಡಬೇಕಾಗಿದ್ದ ಸಿಎಸ್‌ಆರ್ ಅನುದಾನ ತಡೆ ಹಿಡಿದಿದೆ. ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಎಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಂತ್ ಕುಮಾರ್ ಮನವಿ ಸಲ್ಲಿಸಿದರು.

ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಗಳು ಪಂಚಾಯಿತಿಗೆ ತೆರಿಗೆ ಪಾವತಿಸದೆ ಬಾಕಿ ಇಟ್ಟಿದೆ ಎಂದು ಫಲಿಮಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಾಯಾತ್ರಿ ಪ್ರಭು ಹಾಗೂ ಸದಸ್ಯ ರಾಯೇಶ್ ಪೈ ಮನವಿ ದೂರಿದರು.

ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಅವರು, ಸುಜ್ಲಾನ್ ಕಂಪನಿಯಿಂದ ಎಸ್‌ಎಲ್‌ಆರ್‌ಎಂ ಘಟಕಕ್ಕೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಕೆಐಎಡಿಬಿ ಅಧಿಕಾರಿಗಳಾದ ಗಣಪತಿ, ಜನಾರ್ದನ ನಾಯಕ್, ಸಣ್ಣ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್‌ದಾಸ್ ನಾಯಕ್, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಕೃಷ್ಣರಾಜ್ ಕೊಡಂಚಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT