ಉಡುಪಿ: ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಭಾನುವಾರ ಇಸ್ರೋ ಅಧ್ಯಕ್ಷ ಕೆ.ಶಿವನ್ ಕುಟುಂಬ ಸಮೇತರಾಗಿ ಭೇಟಿನೀಡಿ ಚಂದ್ರಯಾನ ಯಶಸ್ವಿಯಾಗಲಿ ಎಂದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಪರ್ಯಾಯ ಪಲಿಮಾರು ವಿದ್ಯಾಧೀಶ ಸ್ವಾಮೀಜಿ ಅವರನ್ನು ಭೇಟಿಮಾಡಿ, ಚಂದ್ರಯಾನ ಯಶಸ್ಸಿಗೆ ದೇವರಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದರು.
ದೇಶದ ಬಾಹ್ಯಾಕಾಶ ಕ್ಷೇತ್ರದ ಹಿರಿಮೆಯನ್ನು ಹೆಚ್ಚಿಸುವ ಚಂದ್ರಯಾನ ಯಶಸ್ಸಿಗೆ ದೇವರ ಅನುಗ್ರಹ ಖಂಡಿತ ಸಿಗಲಿದೆ ಎಂದು ಪಲಿಮಾರು ಶ್ರೀಗಳು ಹೇಳಿದರು.
ಬಳಿಕ ಕೆ.ಶಿವನ್ ಹಾಗೂ ಕುಟುಂಬದ ಸದಸ್ಯರಿಗೆ ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದರು. ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮುನ್ನ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ಮಾಡಿ ದೇವರ ದರ್ಶನ ಪಡೆದು ಅನ್ನ ಪ್ರಸಾದ ಸ್ವೀಕರಿಸಿದರು.
ಶ್ರೀಕೃಷ್ಣನ ದರ್ಶನದ ಬಳಿಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಶಿವನ್ ತೆರಳಿದರು.