ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ಕರಾವಳಿ ತೀರ ಸುರಕ್ಷಿತ: ಕೋಸ್ಟ್ ಗಾರ್ಡ್‌ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ

ಕರಾವಳಿ ರಕ್ಷಣೆಗೆ ಅಗತ್ಯ ತರಬೇತಿ: ಕೋಸ್ಟ್ ಗಾರ್ಡ್ ಕಮಾಂಡರ್ ಪಿ.ಕೆ.ಮಿಶ್ರಾ
Last Updated 25 ಫೆಬ್ರುವರಿ 2023, 14:11 IST
ಅಕ್ಷರ ಗಾತ್ರ

ಉಡುಪಿ: ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯು ರಾಜ್ಯದ ಕರಾವಳಿ ಕಾವಲು ಪಡೆಗೆ ನೀಡಿರುವ ತರಬೇತಿಯ ಕಾರ್ಯ ವಿಧಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ ರಾಜ್ಯದ ಕರಾವಳಿ ತೀರವನ್ನು ಸುರಕ್ಷಿತವಾಗಿಡಲು ಸಾಧ್ಯವಾಗಲಿದೆ ಎಂದು ಮಂಗಳೂರು ವಿಭಾಗದ ಕೋಸ್ಟ್ ಗಾರ್ಡ್‌ ಡಿಐಜಿ ಕಮಾಂಡರ್ ಪಿ.ಕೆ.ಮಿಶ್ರಾ ಹೇಳಿದರು.

ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಕಚೇರಿಯಲ್ಲಿ ಶನಿವಾರ ನಡೆದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಮೊದಲ ತಂಡದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಸಮುದ್ರದಲ್ಲಿ ಕಾರ್ಯನಿರ್ವಹಿಸುವಾಗ ಸೂಕ್ತ ಸಂವಹನ ಹಾಗೂ ಕಾರ್ಯಾಚರಣೆ ಕುರಿತ ಸ್ಪಷ್ಟ ಮಾಹಿತಿ ಎಲ್ಲ ಸಿಬ್ಬಂದಿಗೂ ಇರಬೇಕು. ಕೌಶಲದಿಂದ ಕೂಡಿದ ಕಾರ್ಯವಿಧಾನ ಅಳವಡಿಸಿಕೊಂಡು ಕರ್ತವ್ಯ ಸಂದರ್ಭದಲ್ಲಿ ಎದುರಾಗುವ ಎಲ್ಲ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಬೇಕು. ಸಿಬ್ಬಂದಿಗೆ ಹೆಚ್ಚಿನ ತರಬೇತಿಯ ಅಗತ್ಯವಿದಲ್ಲಿ ಕೋಸ್ಟ್ ಗಾರ್ಡ್ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಪ್ರಸನ್ನ ಮಾತನಾಡಿ, ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಪೊಲೀಸ್ ಸಿಬ್ಬಂದಿಯ ಜತೆಗೆ ಕಂದಾಯ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆಯ ಸಿಬ್ಬಂದಿಗೂ ಅಗತ್ಯ ತರಬೇತಿ ನೀಡಿದರೆ ಪ್ರಾಕೃತಿಕ ವಿಕೋಪಗಳು ಎದುರಾದ ಸಂದರ್ಭದಲ್ಲಿ ಸಮರ್ಥವಾಗಿ ಎದುರಿಸಲು ಸಾಧ್ಯವಾಗಲಿದೆ ಎಂದರು.

ಸಾರ್ವಜನಿಕರಿಗೂ ಸರ್ಟಿಫಿಕೇಟ್ ಕೋರ್ಸ್‌ಗಳ ತರಬೇತಿ ನೀಡುವ ಮೂಲಕ ತರಬೇತಿ ಸಂಸ್ಥೆಯಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸಬಹುದಾಗಿದೆ ಎಂದರು.

ಮಲ್ಪೆಯ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯಲ್ಲಿ ಫೆ.13ರಿಂದ 25 ರವರೆಗೆ ನಡೆದ ಪ್ರಥಮ ತಂಡದ ತರಬೇತಿ ಕಾರ್ಯಕ್ರಮದಲ್ಲಿ ರಾಜ್ಯದ ಕರಾವಳಿ ಕಾವಲು ಪೊಲೀಸ್‌ ಪಡೆಯ 25 ಸಿಬ್ಬಂದಿ ಭಾಗವಹಿಸಿದ್ದರು. ತರಬೇತಿಯಲ್ಲಿ ಭಾಗವಹಿಸಿದ್ದವರಿಗೆ ಸಮುದ್ರದಲ್ಲಿ ಈಜು ತರಬೇತಿ, ಅಪಾಯಕ್ಕೆ ಸಿಲುಕಿದವರನ್ನು ರಕ್ಷಣೆ ಮಾಡುವ ಕ್ರಮ, ಅಗ್ನಿ ಅವಘಡಗಳು ಎದುರಾದಾಗ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸುವಿಕೆ, ಸಮುದ್ರದಲ್ಲಿ ಸಂಪರ್ಕ ವ್ಯವಸ್ಥೆಗಳ ಬಳಕೆ, ಬೋಟ್‌ಗಳ ಕಾರ್ಯವಿಧಾನ, ಡ್ರೋಣ್ ಬಳಕೆ, ಕಾಯಿದೆಗಳು ಹಾಗೂ ರಕ್ಷಣಾ ಕಾರ್ಯಚರಣೆಗೆ ಅಗತ್ಯವಿರುವ ತರಬೇತಿಯನ್ನು ನೀಡಲಾಯಿತು. ತರಬೇತಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಸಿಬ್ಬಂದಿಗೆ ಬಹುಮಾನ ವಿತರಿಸಲಾಯಿತು.

ನಕ್ಸಲ್ ನಿಗ್ರಹ ಪಡೆಯ ಎಸ್ಪಿ ನಿಕ್ಕಂ ಪ್ರಕಾಶ್ ಅಮೃತ್ ಉಪಸ್ಥಿತರಿದ್ದರು. ಕರಾವಳಿ ಕಾವಲು ಪೊಲೀಸ್‌ ಪಡೆಯ ಎಸ್ಪಿ ಹಾಗೂ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಅಬ್ದುಲ್ ಅಹದ್ ಸ್ವಾಗತಿಸಿದರು. ಕರಾವಳಿ ಕಾವಲು ಪೊಲೀಸ್ ಇನ್‌ಸ್ಪೆಕ್ಟರ್ ಶಂಕರ್ ಕಾರ್ಯಕ್ರಮ ನಿರೂಪಿಸಿದರು. ಇನ್‌ಸ್ಪೆಕ್ಟರ್ ಪ್ರಮೋದ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT