ಕೊಡಿ ಹಬ್ಬ: ಕರಾವಳಿ ಜನರ ಆಡುಮಾತಿನಂತೆ ‘ಕೊಡಿ ಹಬ್ಬ’ ಎನ್ನುವ ಹೆಸರು ಹುಟ್ಟಿಕೊಳ್ಳಲು ಹಲವು ಕಾರಣಗಳನ್ನು ಹೇಳಲಾಗುತ್ತಿದೆ. ಕೋಟೇಶ್ವರದ ಆಳ್ವಿಕೆ ನಡೆಸುತ್ತಿದ್ದ ಮಾಹಿಷ್ಮತಿ ರಾಜ ವಸು ಮಹಾರಾಜ, ಕೋಟಿಲಿಂಗೇಶ್ವರನಿಗೆ ಬ್ರಹ್ಮ ರಥ ಅರ್ಪಣೆ ಮಾಡಲು ನಿಶ್ಚಯಿಸಿದ್ದ. ಜಾತ್ರೆಯ ದಿನವಾದರೂ ರಥ ನಿರ್ಮಾಣ ಸಾಧ್ಯವಾಗದೆ ಇದ್ದುದರಿಂದಾಗಿ, ಕೊಡಿ (ಬಿದಿರು) ಯಿಂದ ನಿರ್ಮಿಸಿದ ರಥದಲ್ಲಿ ಮೊದಲ ಉತ್ಸವ ನಡೆಯಿತು. ಅದಕ್ಕಾಗಿ ‘ಕೊಡಿ ಹಬ್ಬ' ಎಂದಾಯಿತು ಎನ್ನುವ ವ್ಯಾಖ್ಯಾನ ಇದೆ. ನವ ದಂಪತಿಗಳು ಇಲ್ಲಿನ ಕೊಡಿ (ಕಬ್ಬಿನ ಜಲ್ಲೆ) ಯನ್ನು ಕೊಂಡೊಯ್ದರೆ, ಸಂತಾನ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆಗಳೂ ಇವೆ.