ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಲೂರು: ಪ್ರವಾಸಿ ಮಂದಿರ ಉದ್ಘಾಟನೆ

Last Updated 17 ಮೇ 2022, 4:10 IST
ಅಕ್ಷರ ಗಾತ್ರ

ಕುಂದಾಪುರ: ಕೊಲ್ಲೂರು ಕ್ಷೇತ್ರಕ್ಕೆ ಬರುವ ಪ್ರವಾಸಿಗರಿಗೆ ಅನುಕೂಲವಾಗುವಂತೆ ಲೋಕೋಪಯೋಗಿ ಇಲಾಖೆ ವತಿಯಿಂದ ₹ 1.50 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪ್ರವಾಸಿ ಮಂದಿರವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೋಮವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ‘ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನಕ್ಕಾಗಿ ದೇಶದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಅವರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ದೂರದೃಷ್ಟಿಯಲ್ಲಿಟ್ಟುಕೊಂಡು ಯಾವುದೇ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದಲ್ಲಿ ಸಾರ್ವಜನಿಕರಿಗೆ ಅದರಿಂದ ಹೆಚ್ಚಿನ ಅನುಕೂಲವಾಗಲಿದೆ. ಗ್ರಾಮೀಣ ರಸ್ತೆಗಳ ನಿರ್ಮಾಣ, ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ, ಕಿಂಡಿ ಅಣೆಕಟ್ಟುಗಳ ನಿರ್ಮಾಣಗಳಂತಹ ಯೋಜನೆಗಳಿಂದ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದರು.

‘ಮೀನುಗಾರಿಕೆಯನ್ನು ಹೆಚ್ಚಿನ ಲಾಭದಾಯಕವನ್ನಾಗಿ ಮಾಡಲು, ಮೀನುಗಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಮೀನಿನ ಗುಣಮಟ್ಟ ಕಾಪಾಡಲು ಅಗತ್ಯವಿರುವ ಶೀತಲೀಕರಣ ವ್ಯವಸ್ಥೆ ನಿರ್ಮಾಣಕ್ಕೆ ಹಾಗೂ ಶೀತಲೀಕೃತ ವಾಹನಗಳನ್ನು ಒದಗಿಸುವುದು ಸೇರಿದಂತೆ ಮತ್ತಿತರ ಪರಿಕರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಹೇಳಿದರು.

ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಮಾತನಾಡಿ, ‘ಕೊಲ್ಲೂರಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಅಧಿಕವಾಗುತ್ತಿದ್ದು, ಭಕ್ತರಿಗೆ ಹೆಚ್ಚಿನ ಸಂಖ್ಯೆಯ ವಸತಿ ಸೌಲಭ್ಯದ ಅಗತ್ಯವಿದೆ. ಪ್ರಸ್ತುತ ನಿರ್ಮಿಸಿರುವ ಹೊಸ ಪ್ರವಾಸಿ ಮಂದಿರದ ಜತೆಗೆ, ಈಗಾಗಲೇ ಇರುವ ಹಳೆಯ ಪ್ರವಾಸಿ ಮಂದಿರವನ್ನು ತೆರವುಗೊಳಿಸಿ ಆ ಪ್ರದೇಶದಲ್ಲಿ ಸುಸಜ್ಜಿತ ಹೊಸ ಪ್ರವಾಸಿ ಮಂದಿರ ನಿರ್ಮಾಣ ಮಾಡಲು ಈಗಾಗಲೇ ₹ 9.80 ಕೋಟಿ ಮಂಜೂರಾಗಿದೆ. ಶೀಘ್ರದಲ್ಲಿ ಕಾಮಗಾರಿ ಅರಂಭಗೊಳ್ಳಲಿದೆ’ ಎಂದರು.

ಕೊಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವರಾಮ ಕೃಷ್ಣ ಭಟ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ರವಿಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT