ಕುಂದಾಪುರ: ತ್ರಾಸಿ, ಮೊವಾಡಿ, ಬೈಂದೂರು ತಾಲ್ಲೂಕಿನ ಮರವಂತೆ ಹಾಗೂ ಬಡಾಕೆರೆ ಗ್ರಾಮದ ವ್ಯಾಪ್ತಿಯಲ್ಲಿ ಹರಿಯುವ ಸೌಪರ್ಣಿಕಾ ನದಿ ತೀರದಲ್ಲಿ ನಡೆಯುತ್ತಿದ್ದ ಅನಧಿಕೃತವಾಗಿ ಮರಳುಗಾರಿಕೆ ಮೇಲೆ ದಾಳಿ ನಡೆಸಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು 3 ಟಿಪ್ಪರ್ ಲಾರಿಗಳನ್ನು ವಶ ಪಡಿಸಿಕೊಂಡಿದ್ದಾರೆ.
ಇಲಾಖೆ ಹಿರಿಯ ಭೂವಿಜ್ಞಾನಿ ಸಂದೀಪ್ ಜಿ.ಯು. ಮಾರ್ಗದರ್ಶನದಂತೆ ಸೆ.21ರಂದು ಬೆಳಗಿನ ಜಾವ 4.30ಕ್ಕೆ ಭೂ ವಿಜ್ಞಾನಿ ಸಂಧ್ಯಾ ನೇತೃತ್ವದ ತಂಡ ದಾಳಿ ನಡೆಸಿ ಕುಂದಾಪುರ ತಾಲ್ಲೂಕಿನ ತ್ರಾಸಿ ಗ್ರಾಮದ ಆನಗೋಡಿನಲ್ಲಿ ಮರಳು ತುಂಬಲು ದಕ್ಕೆಯಲ್ಲಿ ನಿಲ್ಲಿಸಿದ್ದ ಒಂದು ಲಾರಿಯನ್ನು ವಶಕ್ಕೆ ಪಡೆದಿದೆ.
ಮತ್ತೊಂದು ಪ್ರಕರಣದಲ್ಲಿ ತ್ರಾಸಿ ಗ್ರಾಮ ವ್ಯಾಪ್ತಿಯ ದೇವಸ್ಥಾನದ ಬಳಿ ಅನಧಿಕೃತ ಮರಳು ಗಣಿಗಾರಿಕೆ ಮಾಡಲು ದಕ್ಕೆಯಲ್ಲಿ ನಿಲ್ಲಿಸಿದ್ದ 2 ಟಿಪ್ಪರ್ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ದಾಳಿಯಾಗುತ್ತಿದ್ದಂತೆ ಕುಂದಾಪುರ ವ್ಯಾಪ್ತಿಯ ಹಕ್ಲಾಡಿ, ಕಾವ್ರಾಡಿ, ಹಳ್ನಾಡು, ಅಂಪಾರು ಹಾಗೂ ಬೈಂದೂರು ತಾಲ್ಲೂಕು ಬಡಾಕೆರೆ ವ್ಯಾಪ್ತಿಯಲ್ಲಿ ಅನಧಿಕೃತ ಮರಳುಗಾರಿಕೆ ನಡೆಸುತ್ತಿದ್ದವರು ಮರಳು ಗಣಿಗಾರಿಕೆ ಹಾಗೂ ಸಾಗಾಣಿಕೆ ಸ್ಥಗಿತಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಅನಧಿಕೃತ ಮರಳು ಗಣಿಗಾರಿಕೆಗೆ ದಕ್ಕೆ ಹಾಗೂ ಸಾಗಾಣಿಕೆಗೆ ಕೆಲವು ಖಾಸಗಿ (ಪಟ್ಟಾ) ಜಾಗಗಳಲ್ಲಿ ರಸ್ತೆ ನೀಡಿರುವುದು ಸ್ಥಳ ಪರಿಶೀಲನೆ ಸಂದರ್ಭದಲ್ಲಿ ಕಂಡುಬಂದಿದೆ. ನಿಯಮ ಉಲ್ಲಂಘಿಸಿದ ಜಾಗದ ಪಟ್ಟಾದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ದಾಳಿ ಸಂಬಂಧ ಪ್ರಕರಣ ದಾಖಲಾಗಿದ್ದು, ಲಾರಿಗಳನ್ನು ಗಂಗೊಳ್ಳಿ ಠಾಣೆಯ ಸುಪರ್ದಿಯಲ್ಲಿ ಇರಿಸಲಾಗಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಿಜ್ಞಾನಿ ಸಂಧ್ಯಾ ತಿಳಿಸಿದ್ದಾರೆ.