ಕುಂದಾಪುರ: ತಾಲ್ಲೂಕಿನಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ (ಬಕ್ರೀದ್ ಹಬ್ಬ)ವನ್ನು ಗುರುವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು.
ಕುಂದಾಪುರ, ಗಂಗೊಳ್ಳಿ, ಕೋಡಿ, ಕಂಡ್ಲೂರು, ಹೆಮ್ಮಾಡಿ, ಮಾವಿನಕಟ್ಟೆ, ಕೋಟೇಶ್ವರ, ಮೂಡುಗೋಪಾಡಿ, ಹೈಕಾಡಿ, ಹಂಗಳೂರು ಸೇರಿದಂತೆ ತಾಲ್ಲೂಕಿನ ವಿವಿಧ ಮಸೀದಿಗಳಲ್ಲಿ ಗುರುವಾರ ಹಬ್ಬದ ಪ್ರಯುಕ್ತ ವಿಶೇಷ ಈದ್ ನಮಾಜ್ ನೆರವೇರಿಸಲಾಯಿತು.
ಮುಸ್ಲಿಂ ಬಾಂಧವರು ಬೆಳಿಗ್ಗೆ ಹೊಸ ಬಟ್ಟೆಗಳನ್ನು ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಧರ್ಮಗುರುಗಳ ಹಾಗೂ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಸಲಾಯಿತು.
ಕುಂದಾಪುರ ಜುಮ್ಮಾ ಮಸೀದಿಯಿಂದ ಬೆಳಿಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಮಸೀದಿಯ ಧರ್ಮಗುರು ಮೌಲಾನಾ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ನೆರವೇರಿಸಲಾಯಿತು. ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನ ಅಬ್ದುಲ್ ಕರೀಂ ನದ್ವಿ ಹಾಗೂ ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನ ಅಬ್ದುಲ್ ಮತಿನ್ ಸಿದ್ದಿಕಿ ಅವರ ನೇತೃತ್ವದಲ್ಲಿ ವಿಶೇಷ ನಮಾಜ್ ನಡೆಯಿತು.
ಯಾವುದೇ ಅಹಿತಕರ ಘಟನೆ ನಡೆದಂತೆ ಕುಂದಾಪುರ ಪೊಲೀಸ್ ಉಪ ವಿಭಾಗ ವ್ಯಾಪ್ತಿಯಲ್ಲಿ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಹಾಗೂ ಗೃಹ ರಕ್ಷಕ ದಳದಿಂದ ಭದ್ರತೆ ಏರ್ಪಡಿಸಲಾಗಿತ್ತು.