ಹೆಬ್ರಿ: ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತವಾಗಿದ್ದು ಬದಲಿ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಘಾಟಿಯ ನಾಲ್ಕನೆ ತಿರುವಿನಲ್ಲಿ ರಸ್ತೆ ಮೇಲೆ ಗುಡ್ಡ ಕುಸಿದು ಮರಗಳು ಬಿದ್ದಿವೆ.
ಗುಡ್ಡ ತೆರವು ಕಾರ್ಯ ಅರಂಭವಾಗಿದ್ದರೂ ವಾಹನಗಳ ಸುಗಮ ಸಂಚಾರಕ್ಕೆ ಸಮಯ ಬೇಕಾಗಬಹುದು. ನಿರಂತರ ಸುರಿಯುತ್ತಿರುವ ಮಳೆಯಿಂದ ತೆರವು ಕಾರ್ಯಾಚರಣೆಗೆ ಅಡ್ಡಿಯಾಗಿದೆ.
ಹಲವು ದಿನಗಳಿಂದ ಹೆಬ್ರಿ ತಾಲ್ಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ಆಗುಂಬೆ ಪರಿಸರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಕರಾವಳಿ ಹಾಗೂ ಮಲೆನಾಡನ್ನು ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಉಡುಪಿ ಶಿವಮೊಗ್ಗ ಜಿಲ್ಲೆಗಳ ನಡುವಿನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಸದ್ಯ ವಾಹನಗಳು ಬದಲಿ ಮಾರ್ಗದಲ್ಲಿ ಉಡುಪಿ ಜಿಲ್ಲೆಯಿಂದ ಶಿವಮೊಗ್ಗಕ್ಕೆ ಹಾಗೂ ಶಿವಮೊಗ್ಗ ಜಿಲ್ಲೆಯಿಂದ ಕರಾವಳಿ ಭಾಗಕ್ಕೆ ಬರಬೇಕಾಗಿದೆ.