ಉಡುಪಿ: ಶಿವಾಜಿಯ ಮೂಲ ಕರ್ನಾಟಕವಾಗಿದ್ದು, ಅವರ 8ನೇ ತಲೆಮಾರಿನ ಪೂರ್ವಜರು ಗದಗ ಜಿಲ್ಲೆಯಲ್ಲಿ ವಾಸವಿದ್ದರು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಉಡುಪಿಯಲ್ಲಿ ಭಾನುವಾರ ನಗರ ಸಾರಿಗೆ ಬಸ್ ನಿಲ್ದಾಣ ಉದ್ಘಾಟಿಸಿ ಮಾತನಾಡಿದ ಅವರು, ‘ಬೆಳಗಾವಿ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವಿವೇಕತನದ ಹೇಳಿಕೆ ನೀಡುತ್ತಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಕರ್ನಾಟಕದ ಅವಿಭಾಜ್ಯ ಅಂಗಗಳು’ ಎಂದು ಸವದಿ ಹೇಳಿದರು.
ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಕೂಡಿ ಸರ್ಕಾರ ರಚಿಸಿದ್ದು, ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ. ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಮಹಾರಾಷ್ಟ್ರ ಸರ್ಕಾರ ಅಸ್ಥಿರವಾಗಿದೆ. ಜನರ ಗಮನವನ್ನು ಬೇರೆಡೆ ಸೆಳೆಯಲು ಗಡಿ ವಿವಾದವನ್ನು ಮುನ್ನಲೆಗೆ ತರಲಾಗುತ್ತಿದೆ ಎಂದರು.
ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಅಭ್ಯರ್ಥಿ ಯಾರು ಎಂಬುದನ್ನು ಪಕ್ಷದ ನಾಯಕರು ನಿರ್ಧರಿಸಲಿದ್ದಾರೆ. ಅರವಿಂದ್ ಪಾಟೀಲ್ ಬಿಜೆಪಿಗೆ ಬರಲು ಚರ್ಚಿಸಿದ್ದು, ಪಕ್ಷಕ್ಕೆ ಯಾರೇ ಬಂದರೂ ಸ್ವಾಗತವಿದೆ. ಆದರೆ, ಉಪ ಚುನಾವಣೆಯಲ್ಲಿ ಟಿಕೆಟ್ ಯಾರಿಗೆ ಕೊಡಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದರು.
ಶೀಘ್ರ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಸಿ.ಎಂ.ಇಬ್ರಾಹಿಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸವದಿ, ಇಬ್ರಾಹಿಂ ದೊಡ್ಡ ಜ್ಞಾನಿಯಲ್ಲ, ಭಾಷಣಕಾರ ಅಷ್ಟೆ. ರಾಜಕೀಯ ಭಾಷಣ ಮಾಡುವಾಗ ಭವಿಷ್ಯ ನುಡಿಯುವುದು ಸಾಮಾನ್ಯ ಎಂದು ವ್ಯಂಗ್ಯವಾಡಿದರು.