ಉಡುಪಿ: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕ್ರೀಡೆಗೆ ಪ್ರೋತ್ಸಾಹ ಕಡಿಮೆ ಎಂದು ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚಿನ ಪದಕ ವಿಜೇತರಾದ ಕುಂದಾಪುರದ ಗುರುರಾಜ ಪೂಜಾರಿ ಬೇಸರ ವ್ಯಕ್ತಪಡಿಸಿದರು.
ಜಿಲ್ಲಾಡಳಿತದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವೇಯ್ಟ್ ಲಿಫ್ಟಿಂಗ್ ತರಬೇತಿಗೆ ತಿಂಗಳಿಗೆ ₹ 30 ರಿಂದ ₹ 40 ಸಾವಿರ ವ್ಯಯವಾಗುತ್ತದೆ. ಕ್ರೀಡಾಪಟುಗಳಿಗೆ ಪ್ರೋತ್ಸಾಹ ಹಾಗೂ ಉದ್ಯೋಗಗಳನ್ನು ನೀಡಿದರೆ ದೇಶಕ್ಕೆ ಹೆಚ್ಚು ಪದಕಗಳು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
8 ವರ್ಷಗಳಿಂದ ಚಂಡಿಘಡದ ಏರ್ಫೋರ್ಸ್ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸ್ವಂತ ಊರುಬಿಟ್ಟು ಬೇರೆಡೆ ಕರ್ತವ್ಯ ನಿರ್ವಹಿಸುವುದು ಕಷ್ಟವಾಗುತ್ತದೆ. ರಾಜ್ಯದಲ್ಲಿ ಉದ್ಯೋಗ ನೀಡಿದರೆ ಹೆಚ್ಚು ಅನುಕೂಲವಾಗುತ್ತದೆ ಎಂದು ಗುರುರಾಜ ಪೂಜಾರಿ ಮನವಿ ಮಾಡಿದರು.
ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ರಾಜ್ಯ ಸರ್ಕಾರ ನೀಡುವ ತಡವಾಗಿ ಪ್ರೋತ್ಸಾಹ ಧನ ಬಿಡುಗಡೆ ಮಾಡುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಬೆಲೆ ಇಲ್ಲದಾಗಿದೆ. ಬೇರೆ ರಾಜ್ಯಗಳಲ್ಲಿ ಕಂಚು ಗೆದ್ದ ಕ್ರೀಡಾಪಟುಗಳಿಗೆ ₹ 40 ರಿಂದ ₹ 50 ಲಕ್ಷ ಪ್ರೋತ್ಸಾಹ ಧನ ಘೋಷಿಸಿದರೆ ಕರ್ನಾಟಕದಲ್ಲಿ ಕೇವಲ ₹ 8 ಲಕ್ಷ ಘೋಷಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಆಟಗಾರರು ಹೆಚ್ಚು ಪದಕಗಳನ್ನು ಗೆಲ್ಲಲ್ಲಿದ್ದಾರೆ ಎಂದು ಹೇಳಿದರು.