ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಣ್ಯ ಸಂರಕ್ಷಣೆಯ ಮಹತ್ವ ಜಾಗೃತಗೊಳ್ಳಲಿ

ವೃಕ್ಷೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಡಿಸಿ ಜಗದೀಶ್‌
Last Updated 4 ಅಕ್ಟೋಬರ್ 2019, 14:52 IST
ಅಕ್ಷರ ಗಾತ್ರ

ಉಡುಪಿ: ಮಣಿಪಾಲ ಟ್ಯಾಪ್ಮಿ ಬಳಿಯಿರುವ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ವನದಲ್ಲಿ ಅರಣ್ಯ ಮಾಹಿತಿ ಕೇಂದ್ರವನ್ನು ಸ್ಥಾಪಿಸಿ, ಜನರಿಗೆ ಅರಣ್ಯದ ಬಗ್ಗೆ ಮಾಹಿತಿ ಹಾಗೂ ಅದರ ಪ್ರಯೋಜನಗಳನ್ನು ತಿಳಿಸಬೇಕು. ಆ ಮೂಲಕ ಜನರಲ್ಲಿ ಅರಣ್ಯ ಸಂರಕ್ಷಣೆಯ ಮಹತ್ವವನ್ನು ಜಾಗೃತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಹೇಳಿದರು.

ಕರ್ನಾಟಕ ಅರಣ್ಯ ಇಲಾಖೆ ಕುಂದಾಪುರ ವಿಭಾಗ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್‌ಕ್ಲಬ್‌ ಆಶ್ರಯದಲ್ಲಿ ಮಣಿಪಾಲ ಟ್ಯಾಪ್ಮಿ ಬಳಿಯಿರುವ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ ವನದಲ್ಲಿ ಶುಕ್ರವಾರ ಆಯೋಜಿಸಿದ್ದ ವೃಕ್ಷೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಅರಣ್ಯ ಮನುಷ್ಯನ ಬದುಕಿನಲ್ಲಿ ಎಷ್ಟು ಮುಖ್ಯ ಪಾತ್ರ ನಿರ್ವಹಿಸುತ್ತದೆ ಎಂಬುದನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು. ಕಾಡನ್ನು ಉಳಿಸಿ ಬೆಳೆಸುವುದರ ಜತೆಗೆ ಅದನ್ನು ಮುಂದಿನ ತಲೆಮಾರಿಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಗಿಡ ನೆಡುವ ಪ್ರವೃತ್ತಿ ಹಾಗೂ ಕಾಡು ಬೆಳೆಸುವ ಆಸಕ್ತಿಯನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು ಎಂದರು.

ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ. ಕಮಲ ಮಾತನಾಡಿ, ಕಾಡು ಇದ್ದರೆ ಮಾತ್ರ ಮನುಷ್ಯ ಜೀವಂತವಾಗಿರಲು ಸಾಧ್ಯ. ಮನುಷ್ಯನ ಬದುಕಿಗೆ ಅವಶ್ಯಕವಾಗಿರುವ ಗಾಳಿ, ನೀರು, ಆಹಾರಗಳೆಲ್ಲವನ್ನೂ ಕಾಡಿನಿಂದಲೇ ಪಡೆಯಬೇಕು. ಆದ್ದರಿಂದ ಅರಣ್ಯ ನಾಶವನ್ನು ತಡೆಗಟ್ಟಿ, ನಮ್ಮ ಹಿರಿಯರು ನಮಗೆ ಬಿಟ್ಟುಹೋಗಿರುವ ಅರಣ್ಯ ಸಂಪತ್ತನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನೀತ್‌ ಪಾಠಕ್‌ ಮಾತನಾಡಿ, ಗಿಡವನ್ನು ನೆಡುವುದರ ಜತೆಗೆ ಇರುವ ಮರ-ಗಿಡಗಳ ರಕ್ಷಣೆಯೂ ಅತ್ಯಗತ್ಯವಾಗಿದ್ದು, ಯುವಜನತೆ ಗಿಡ ನೆಟ್ಟು ಬೆಳೆಸುವ ಕಾರ್ಯದಲ್ಲಿ ಹೆಚ್ಚೆಚ್ಚು ತೊಡಗಬೇಕು ಎಂದು ಹೇಳಿದರು.

ಸಿಇಒ ಪ್ರೀತಿ ಗೆಹ್ಲೋಟ್‌, ಉಡುಪಿ ವಿಭಾಗದ ಕರ್ನಾಟಕ ರಾಜ್ಯ ಉಪವಲಯ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ಜೀವನ್‌ದಾಸ್‌ ಶೆಟ್ಟಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್‌, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಸಂತೋಷ್‌ ಸರಳೇಬೆಟ್ಟು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಆರ್ಟಿಸ್ಟ್‌ ಫೋರಂ ಅಧ್ಯಕ್ಷ ಪುರುಷೋತ್ತಮ ಅಡ್ವೆ ಹಾಗೂ ಮಕ್ಕಳ ಮನೆ ನೇತೃತ್ವ ವಹಿಸಿದ್ದ ಗಣೇಶ್‌ ಕುಂದಾಪುರ ಅವರನ್ನು ಸನ್ಮಾನಿಸಲಾಯಿತು.

ಉಡುಪಿ ವಲಯ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್‌ ಲೋಬೊ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೆಸ್‌ಕ್ಲಬ್‌ ಸಂಚಾಲಕ ನಾಗರಾಜ್‌ ವರ್ಕಾಡಿ ವಂದಿಸಿದರು. ಪ್ರಶಾಂತ್‌ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT